ಮೈಸೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮೇಲೆ ಬರುತ್ತಿರುವ ಆರೋಪಗಳನ್ನು ನೆನೆದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಗದ್ಗದಿತರಾಗಿದ್ದಾರೆ.
ಚಾಮರಾಜನಗರದಲ್ಲಿ ಆಗಿರುವ ಘಟನೆ ಬಗ್ಗೆ ನೋವಿದೆ. ನನ್ನ ಬಗ್ಗೆ ಸಾಕಷ್ಟು ಊಹಾಪೋಹಗಳು ನಡೆಯುತ್ತಿವೆ. ಇದ್ರಿಂದ ನನಗೆ ತುಂಬಾ ನೋವಾಗಿದೆ. ನನ್ನ 10 ವರ್ಷದ ಸೇವೆಯಲ್ಲಿ ನಾನು ಎಂದು ಈ ರೀತಿ ಕೆಲಸ ಮಾಡಿಲ್ಲ ಎಂದಿದ್ದಾರೆ.
ದೇಶದ ಯಾವುದೇ ಮೂಲೆಯಲ್ಲಿ ಆದ ಸಾವು ಸಾವೇ. ಸತ್ತವರ ಮನೆಯಲ್ಲಿ ನೋವಿರುತ್ತದೆ. ಈ ವೇಳೆ ಈ ರೀತಿ ಆರೋಪ ಮಾಡಬಾರದು. ನನ್ನ ಬಗ್ಗೆ ಅವರು(ಚಾಮರಾಜನಗರ ಡಿಸಿ) ಮಾಧ್ಯಮದಲ್ಲಿ ಹೇಳಿಕೆ ನೀಡದೇ ಇದ್ದಿದ್ದರೆ ನಾನೂ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಅವರು ಅಸತ್ಯವಾದ ವಿಚಾರಗಳನ್ನು ಹೇಳಿದ್ದಾರೆ. ಅದಕ್ಕೆ ಸ್ಪಷ್ಟೀಕರಣ ನೀಡುತ್ತಿದ್ದೇನೆ. ತನಿಖೆಯಲ್ಲಿ ಎಲ್ಲವೂ ಗೊತ್ತಾಗಲಿದೆ. ಅವರ ಕಷ್ಟ ಕಾಲದಲ್ಲಿ ರಿಸ್ಕ್ ತೆಗೆದುಕೊಂಡು ಆಕ್ಸಿಜನ್ ಕಳುಹಿಸಿದ್ದೇವೆ. ಅದು ನಮ್ಮ ಆಸ್ಪತ್ರೆಯಲ್ಲಿದ್ದ 40 ಸಿಲಿಂಡರ್ ಕಳುಹಿಸಿದ್ದೇವೆ. ಎಲ್ಲಿಯೂ ಆಸ್ಪತ್ರೆಯಿಂದ ಆಕ್ಸಿಜನ್ ಕಳುಹಿಸಿ ರಿಸ್ಕ್ ತೆಗೆದುಕೊಳ್ಳುವುದಿಲ್ಲ. ಇದು ಮಾನವೀಯತೆ ಅಲ್ಲವೇ ? ಎಂದು ಚಾಮರಾಜನಗರ ಡಿಸಿ ಎಂ ಆರ್ ರವಿಗೆ ರೋಹಿಣಿ ಸಿಂಧೂರಿ ಪ್ರಶ್ನೆ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.