
ಮೈಸೂರು: ‘ಸಾರ್ವಜನಿಕರಿಗೆ ಅವಶ್ಯವಿರುವ ಯೋಜನೆಗಳ ಪ್ರಸ್ತಾವಗಳನ್ನು ಮುಖ್ಯಮಂತ್ರಿಯವರಿಗೆ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯ ಬಜೆಟ್ ಪೂರ್ವಭಾವಿಯಾಗಿ ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾಹಿತಿ ಪಡೆದ ನಂತರ ಅವರು ಮಾತನಾಡಿದರು.
‘ಯೋಜನೆಗಳ ಪ್ರಾಮುಖ್ಯತೆಯ ಬಗ್ಗೆ ವಿವರಿಸಿದರೆ ಬಜೆಟ್ನಲ್ಲಿ ಸೇರಿಸುವ ಜೊತೆಗೆ ಜಿಲ್ಲೆಯು ಅಭಿವೃದ್ಧಿ ಪಥದಲ್ಲಿ ಸಾಗುತ್ತದೆ’ ಎಂದು ಹೇಳಿದರು.
‘ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಅವಶ್ಯವಿರುವ ಹೊಸ ಹಾಸ್ಟೆಲ್ಗಳು ಹಾಗೂ ಅವುಗಳಿಗೆ ಸ್ವಂತ ಕಟ್ಟಡಗಳ ವಿವರವನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ದೊರಕಿಸಬೇಕು ಎಂಬುದು ಮುಖ್ಯ ಆಶಯವಾಗಿದೆ’ ಎಂದರು.
ತರಬೇತಿ ಕೇಂದ್ರ:
‘ಆಶ್ರಮ ಶಾಲೆಗಳಲ್ಲಿ ಬಹುತೇಕ ಹೊರಗುತ್ತಿಗೆ ನೌಕರರು ಕೆಲಸ ನಿರ್ವಹಿಸುತ್ತಿದ್ದು, ನೇಮಕಾತಿ ಪ್ರಕ್ರಿಯೆ ಬಗ್ಗೆ ಹಾಗೂ ಹಾಡಿ ಜನರಿಗೆ ಎಚ್.ಡಿ.ಕೋಟೆ, ಪಿರಿಯಾಪಟ್ಟಣ ಹಾಗೂ ಹುಣಸೂರು ತಾಲ್ಲೂಕಿನಲ್ಲಿ ಕೌಶಲ ಆಧಾರಿತ ತರಬೇತಿ ಕೇಂದ್ರಗಳನ್ನು ತೆರೆಯಬೇಕು’ ಎಂದು ಸಭೆಯಲ್ಲಿ ಚರ್ಚಿಸಲಾಯಿತು.
‘ಮೈಸೂರು ನಗರದಲ್ಲಿ 390 ಕೆ.ಎಸ್.ಆರ್.ಟಿಸಿ ಬಸ್ಗಳು ಮಾತ್ರ ಕಳೆದ 15 ವರ್ಷದಿಂದ ಸಂಚಾರಕ್ಕೆ ಲಭ್ಯವಿದೆ. ಜನಸಂಖ್ಯೆ ಹೆಚ್ಚಳವಾಗಿದ್ದು, ಹೆಚ್ಚಿನ ಬಸ್ ಹಾಗೂ ಡಿಪೊಗಳ ಅವಶ್ಯಕತೆ ಇದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
‘ಈ ಬಗ್ಗೆ ಸಮರ್ಪಕ ಮಾಹಿತಿ ಸಲ್ಲಿಸಬೇಕು’ ಎಂದು ಸಚಿವರು ನಿರ್ದೇಶನ ನೀಡಿದರು.
‘ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ವಿದ್ಯಾಭ್ಯಾಸದಿಂದ ವಂಚಿತರಾಗಬಾರದು. ಅವರಿಗೆ ಬೇಕಿರುವ ವಸತಿಶಾಲೆಗಳು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಹಾಗೂ ಇನ್ನಿತರ ಯೋಜನೆಗಳ ಬಗ್ಗೆ ವರದಿ ತಯಾರಿಸಬೇಕು. ಅಧಿಕಾರಿಗಳು ಕೆಲವು ವಿಷಯಗಳನ್ನು ಇಲಾಖಾ ಮಂತ್ರಿಗಳ ವ್ಯಾಪ್ತಿಯಲ್ಲಿ ಚರ್ಚಿಸಿ ಸೇರಿಸಬಹುದು’ ಎಂದರು.
ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ‘ಅಧಿಕಾರಿಗಳು ಜಿಲ್ಲೆಯಲ್ಲಿ ಅವಶ್ಯವಿರುವ ಯೋಜನೆಗಳ ಕುರಿತು ಕ್ರೂಢೀಕೃತ ವರದಿಯನ್ನು ಶೀಘ್ರವಾಗಿ ನಮ್ಮ ಕಚೇರಿಗೆ ಸಲ್ಲಿಸಬೇಕು’ ಎಂದು ಸೂಚಿಸಿದರು.
ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ ಕುಮಾರ್, ಎಂಡಿಎ ಆಯುಕ್ತ ಕೆ.ಆರ್. ರಕ್ಷಿತ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.