ADVERTISEMENT

ಮೈಸೂರು| ಅರ್ಥಪೂರ್ಣವಾಗಿ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರ: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 8 ಜನವರಿ 2026, 12:21 IST
Last Updated 8 ಜನವರಿ 2026, 12:21 IST
   

ಮೈಸೂರು: ‘ಜಿಲ್ಲಾಡಳಿತದಿಂದ ಜನವರಿ 26ರಂದು ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪಿ. ಶಿವರಾಜು ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಬನ್ನಿಮಂಟಪ ಪಂಜಿನ‌ ಕವಾಯತು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಅದು ಬೆಳಿಗ್ಗೆ 9ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವರು’ ಎಂದರು.

‘ಪಥಸಂಚಲನ ಶಿಸ್ತುಬದ್ಧವಾಗಿ ಉತ್ತಮ ರೀತಿಯಲ್ಲಿ ಮೂಡಿಬರುವಂತೆ ತುಕಡಿಗಳಿಗೆ ಪೂರ್ವಭ್ಯಾಸ ಮಾಡಿಸಬೇಕು. ಪಾಲ್ಗೊಳ್ಳಲು ಹೊಸ ವಿದ್ಯಾರ್ಥಿಗಳಿಗೆ ಅವಕಾಶ ಕೊಡಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳು ವಿಭಿನ್ನವಾಗಿ ಹಾಗೂ ಆಕರ್ಷಿಸುವಂತಿರುವಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.

ADVERTISEMENT

‘ಸ್ವಾಗತ, ಸಾಂಸ್ಕೃತಿಕ, ಸಾರಿಗೆ, ಪಥಸಂಚಲನ, ಸ್ವಚ್ಛತೆ ಮೊದಲಾದ ಉಪಸಮಿತಿಗಳನ್ನು ರಚಿಸಲಾಗಿದೆ. ಜವಾಬ್ದಾರಿ ನಿರ್ವಹಣೆಯಲ್ಲಿ ಲೋಪ ಆಗದಂತೆ ನಿಗಾ ವಹಿಸಬೇಕು’ ಎಂದು ನಿರ್ದೇಶನ ನೀಡಿದರು.

‘ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಧ್ವಜ ಮಾರಾಟ ಹಾಗೂ ಬಳಕೆ ನಿಷೇಧಿಸಲಾಗಿದೆ. ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮಾರಾಟ ಮಳಿಗೆಗಳಿಗೆ ದಿಢೀರ್‌ ಭೇಟಿ ನೀಡಿ ‍ಪರಿಶೀಲಿಸಬೇಕು. ಪ್ಲಾಸ್ಟಿಕ್ ಧ್ವಜ ಮಾರಾಟ ಕಂಡುಬಂದಲ್ಲಿ ವಶಪಡಿಸಿಕೊಂಡು‌ ಮಾರಾಟಗಾರರ ವಿರುದ್ಧ ನಿಯಮಾನುಸಾರ ಕ್ರಮ ಜರುಗಿಸಬೇಕು’ ಎಂದರು.

‘ಎಲ್ಲಾ ಇಲಾಖೆಯ ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿ ಗಣರಾಜ್ಯೋತ್ಸವ ಆಚರಿಸಿದ ಬಳಿಕ ಕಡ್ಡಾಯವಾಗಿ ಬನ್ನಿಮಂಟಪದ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಸಮಾಜ ಕಲ್ಯಾಣ ಇಲಾಖೆಯವರು ಎಲ್ಲರ ಹಾಜರಾತಿ ಪಡೆದು ವಿವರವನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಬೇಕು’ ಎಂದು ಸೂಚಿಸಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕ್, ಡಿವೈಎಪಿ ಎಚ್.ಪಿ. ವೀರಣ್ಣ, ಕೆಐಎಡಿಬಿ ಇಇ ಎಚ್.ಕೆ. ಮಾದೇಶ್, ಜಂಟಿ ಕೃಷಿ ನಿರ್ದೇಶಕ ರವಿ, ಡಿ.ಎ.ಆರ್. ಎಸಿಪಿ ಕುಮಾರಸ್ವಾಮಿ, ಮೈಸೂರು ಪೂರ್ವ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಧುರಾ, ಜಿಲ್ಲಾಧಿಕಾರಿ ಕಚೇರಿಯ ಶಿಷ್ಟಾಚಾರ ವಿಭಾಗದ ತಹಶೀಲ್ದಾರ್ ಶಿವಪ್ರಸಾದ್ ಪಾಲ್ಗೊಂಡಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.