ADVERTISEMENT

ಮೈಸೂರು ವಿವಿ ಹಗರಣ: ಇನ್‌ಸ್ಪೆಕ್ಟರ್ ಸೇರಿ ಐವರು ಪೊಲೀಸರ ಅಮಾನತು

ಉತ್ತರ ಪತ್ರಿಕೆ ಬದಲಿಸುವ ಜಾಲದ ವಿರುದ್ಧ ತನಿಖೆಗೆ ಆದೇಶ

​ಪ್ರಜಾವಾಣಿ ವಾರ್ತೆ
Published 10 ಜೂನ್ 2021, 12:31 IST
Last Updated 10 ಜೂನ್ 2021, 12:31 IST
ಮೈಸೂರು ವಿವಿ, ಪ್ರಜಾವಾಣಿ ಚಿತ್ರ
ಮೈಸೂರು ವಿವಿ, ಪ್ರಜಾವಾಣಿ ಚಿತ್ರ   

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯ ಪದವಿ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಬದಲಿಸುವ ವ್ಯವಸ್ಥಿತ ಜಾಲದ ಕುರಿತು ತನಿಖೆಗೆ ಆದೇಶಿಸಿರುವ ನಗರ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ, ಮಂಡಿ ಠಾಣೆಯ ಇನ್‌ಸ್ಪೆಕ್ಟರ್ ನಾರಾಯಣಸ್ವಾಮಿ ಸೇರಿದಂತೆ ಐವರು ಪೊಲೀಸರನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ.

ಏಪ್ರಿಲ್ 21ರಂದು ಇಲ್ಲಿನ ಬೆಂಗಳೂರು–ನೀಲಗಿರಿ ರಸ್ತೆಯ ಬ್ಲೂಡೈಮಂಡ್ ವಸತಿಗೃಹದಲ್ಲಿ ಕೆಲವು ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾನಿಲಯದ ಸಿಬ್ಬಂದಿ ಏಪ್ರಿಲ್ 17ರಂದು ನಡೆದಿದ್ದ ಬಿಎಸ್‌ಸಿ ರಸಾಯನವಿಜ್ಞಾನದ ಉತ್ತರಪತ್ರಿಕೆಯನ್ನು ಸಿದ್ಧಪಡಿಸುತ್ತಿದ್ದರು. ಅಸಲಿ ಉತ್ತರ ಪತ್ರಿಕೆಯ ಜಾಗದಲ್ಲಿ ಈ ಉತ್ತರಪತ್ರಿಕೆ ಇಡುವ ಸಂಚು ಇವರಾಗಿದ್ದಾಗಿತ್ತು. ಈ ವೇಳೆ ದಾಳಿ ನಡೆಸಿದ ಮಂಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸದೇ ನಿರ್ಲಕ್ಷ್ಯ ವಹಿಸಿ, ಆರೋಪಿಗಳನ್ನು ಬಿಟ್ಟು ಕಳುಹಿಸಿದರು’ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಸಂಘಟನೆಯ ಜಂಟಿ ಕಾರ್ಯದರ್ಶಿ ಕೆ.ಎಸ್.ಸೋಮಸುಂದರ್ ದೂರು ನೀಡಿದ್ದರು.

ದೂರನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಕಮಿಷನರ್ ಚಂದ್ರಗುಪ್ತ ಅವರು ಮಹಮ್ಮದ್ ನಿಸಾರ್, ರಾಕೇಶ್, ಚಂದನ್, ಚೇತನ್ ಹಾಗೂ ಮಂಡಿ ಠಾಣೆ ಇನ್‌ಸ್ಪೆಕ್ಟರ್ ನಾರಾಯಣಸ್ವಾಮಿ ಹಾಗೂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆಗೆ ಆದೇಶಿಸಿದ್ದಾರೆ.

ADVERTISEMENT

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಕಮಿಷನರ್ ಚಂದ್ರಗುಪ್ತ, ‘ತನಿಖೆಯು ನಿಷ್ಪಕ್ಷಪಾತವಾಗಿ ನಡೆಯುವ ಉದ್ದೇಶದಿಂದ ಮಂಡಿ ಠಾಣೆ ಇನ್‌ಸ್ಪೆಕ್ಟರ್ ನಾರಾಯಣಸ್ವಾಮಿ ಸೇರಿದಂತೆ ಐವರು ಸಿಬ್ಬಂದಿಯನ್ನು ಅಮಾನತುಪಡಿಸಲಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.