
ನಂಜನಗೂಡು: ದಕ್ಷಿಣಕಾಶಿ ಎಂದು ಪ್ರಸಿದ್ಧವಾಗಿರುವ ಇಲ್ಲಿನ ಶ್ರೀಕಂಠೇಶ್ವರ ಸ್ವಾಮಿಯ ಚಿಕ್ಕಜಾತ್ರಾ ಮಹೋತ್ಸವ ಗುರುವಾರ ಸಾವಿರಾರು ಭಕ್ತರ ಉದ್ಘೋಷ, ಜಯಕಾರಗಳ ನಡುವೆ ವಿಜೃಂಭಣೆಯಿಂದ ನೆರವೇರಿತು.
ಜಾತ್ರೆಯಲ್ಲಿ ಸಾವಿರಾರು ಭಕ್ತರು ಸಂಭ್ರಮದಿಂದ ಪಾಲ್ಗೊಂಡು ರಥೋತ್ಸವದ ವೈಭವ ಕಂಡು, ರಥಗಳಿಗೆ ಭಕ್ತಿಯಿಂದ ಹಣ್ಣು ಧವನ ಎಸೆದು ,ಇಷ್ಟಾರ್ಥ ನೇರವೇರಿಸುವಂತೆ ಪ್ರಾರ್ಥಿನೆ ಸಲ್ಲಿಸಿದರು.
ಚಿಕ್ಕಜಾತ್ರಾ ಮಹೋತ್ಸ ಹಾಗೂ ಹುಣ್ಣಿಮೆಯ ಅಂಗವಾಗಿ ಬೆಳಿಗ್ಗೆ 4ರಿಂದಲೇ ದೇವಾಲಯದಲ್ಲಿ ಪಾರ್ವತಿ ಸಮೇತ ಶ್ರೀಕಂಠೇಶ್ವರಸ್ವಾಮಿಯವರಿಗೆ ಕ್ಷೀರಾಭಿಷೇಕ, ಫಲಪಂಚಾಮೃತಾಭಿಷೇಕ ಹಾಗೂ ಮಹಾನ್ಯಾಸ ಪೂರ್ವಕವಾಗಿ ರುದ್ರಾಭಿಷೇಕವನ್ನು ನೆರವೇರಿಸಲಾಯಿತು.
ದೇವಾಲಯದ ಪ್ರಧಾನ ಅರ್ಚಕ ನಾಗಚಂದ್ರ ದೀಕ್ಷಿತ್ ಅವರ ನೇತೃತ್ವದಲ್ಲಿ ಪ್ರಾತಃಕಾಲಪೂಜೆ, ನಿತ್ಯೋತ್ಸವ ಹಾಗೂ ಸಂಗಮಕಾಲ ಪೂಜೆ, ಮಾಧ್ಯಾನಕಾಲ ಪೂಜೆಯೊಂದಿಗೆ ಮಹಾಮಂಗಳಾರತಿ ನೆರವೇರಿಸಿದ ಬಳಿಕ ದೇವಾಲಯದ ಒಳಾವರಣದಲ್ಲಿ ಗಣಪತಿಪೂಜೆ, ನವಗ್ರಹಪೂಜೆ, ಸ್ವಾಮಿಯವರ ಉತ್ಸವವನ್ನು ನೆರವೇರಿಸಿದ ನಂತರ ವಿವಿಧ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಿ ದೇವರ ಉತ್ಸವಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು, ಮಹಾಮಂಗಳಾರತಿ ನೆರವೇರಿಸುವುದರೊಂದಿಗೆ ರಥೋತ್ಸಕ್ಕೆ ಚಾಲನೆ ದೊರಕಿತು.
ಮೊದಲಿಗೆ ಮಹಾಗಣಪತಿ ಮತ್ತು ಚಂಡಿಕೇಶ್ವರ ರಥ, ಪಾರ್ವತಿ ಸಮೇತ ಶ್ರೀಕಂಠೇಶ್ವರ ರಥ, ಕೊನೆಯದಾಗಿ ಮನೋನ್ಮಣಿ ಅಮ್ಮನವರು ಮೂರು ರಥಗಳನ್ನು ಭಕ್ತರು ಭಕ್ತಿಗೌರವಗಳಿಂದ 1.5 ಕೀ.ಮೀ ರಥ ಬೀದಿಯಲ್ಲಿ ಎಳೆದರು. ಮೂರೂ ರಥಗಳು ಯಾವುದೇ ಅಡ್ಡಿ ಆತಂಕವಿಲ್ಲದೆ ರಥ ಬೀದಿಯನ್ನು ಕ್ರಮಿಸಿ ಸ್ವಸ್ಥಾನ ತಲುಪಿದವು.
ರಥ ಸಂಚರಿಸುವಾಗ ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಭಕ್ತರು ದೇವರ ದರ್ಶನ ಪಡೆದು ಹಣ್ಣು-ದವನ ಎಸೆದು ಹರಕೆ ತೀರಿಸಿ ಭಕ್ತಿಭಾವ ಮೆರೆದರು. ನಂತರ ಹಂಸವಾಹನ ಉತ್ಸವ, ಸಂಜೆ ನಟೇಶ ಉತ್ಸವಗಳು ಜರುಗುವ ಮೂಲಕ ರಥೋತ್ಸವವು ಯಶಸ್ವಿಯಾಯಿತು. ಡಿ.6ರಂದು ಶನಿವಾರ ಕಪಿಲಾನದಿಯ ತೇಲುವ ದೇವಾಲಯದಲ್ಲಿ ತೆಪ್ಪೋತ್ಸವ ಜರುಗಲಿದ್ದು, ನಂತರ ಶಯನೋತ್ಸವ ಮುಂತಾದ ವಿಧಿವಿಧಾನಗಳೊಂದಿಗೆ ಚಿಕ್ಕ ಜಾತ್ರಾಮಹೋತ್ಸವಕ್ಕೆ ತೆರೆ ಬೀಳಲಿದೆ.
ಜಾತ್ರಾ ಮಹೋತ್ಸವದ ಅಂಗವಾಗಿ ನಗರದ ವಿವಿಧ ಸಂಘ ಸಂಸ್ಥೆಗಳು ಭಕ್ತರಿಗೆ ಸಾದ ವಿತರಣೆ ಮಾಡಿದರು. ದೇವಾಲಯದ ದಾಸೋಹ ಭವನದಲ್ಲಿ ವಿಶೇಷವಾಗಿ ಪ್ರಸಾದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.
ದೇವಾಲಯದ ಇಒ ಜಗದೀಶ್ ಕುಮಾರ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.