
ಕೆ.ಆರ್.ನಗರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ ಜಿ–ರಾಮ್ ಜಿ ಯೋಜನೆ ವಿರೋಧಿಸಿ ಕಾಂಗ್ರೆಸ್ ವತಿಯಿಂದ ಶನಿವಾರ ಪ್ರತಿಭಟನೆ ನಡೆಯಿತು.
ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಹಾಸನ– ಮೈಸೂರು ರಸ್ತೆ ಮೂಲಕ ತಾಲ್ಲೂಕು ಆಡಳಿತ ಸೌಧಕ್ಕೆ ತೆರಳಿತು.
ಶಾಸಕ ಡಿ.ರವಿಶಂಕರ್ ಮಾತನಾಡಿ, ‘2005ರಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ನರೇಗಾ ಯೋಜನೆಯಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಶ್ವತವಾದ ಕಟ್ಟಡ, ಕಾಮಗಾರಿಗಳು, ವಿವಿಧ ಅಭಿವೃದ್ಧಿ ಕೆಲಸಗಳು ನಡೆದಿವೆ. ಕೇಂದ್ರ ಸರ್ಕಾರ ಇವೆಲ್ಲವನ್ನೂ ಬುಡಮೇಲು ಮಾಡಲು ಹೊರಟಿದೆ’ ಎಂದು ಆರೋಪಿಸಿದರು.
‘ಹೊಸ ಯೋಜನೆಯಲ್ಲಿ ಕೇಂದ್ರ ಸರ್ಕಾರದ ಶಿಫಾರಸ್ಸಿನ ಆಧಾರದ ಮೇಲೆ ಕಾಮಗಾರಿಗಳು ನಡೆಯುತ್ತವೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿರುವ ದೊಡ್ಡ ಅವಮಾನ. ಗ್ರಾಮ ಪಂಚಾಯಿತಿಗಳಿಗೆ ನೀಡಿರುವ ಅಧಿಕಾರ ಮೊಟಕುಗೊಳಿಸುವ ದೊಡ್ಡ ಹುನ್ನಾರ’ ಎಂದು ಕಿಡಿ ಕಾರಿದರು.
‘ಕ್ಷೇತ್ರದ ಅಭಿವೃದ್ಧಿಗೆ ಈಗಾಗಲೇ ಸಾಕಷ್ಟು ಅನುದಾನ ನೀಡಲಾಗಿದೆ. ಸಾಕಷ್ಟು ಕೆಲಸಗಳು ಪ್ರಗತಿಯಲ್ಲಿವೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾರ್ಯಕರ್ತರು ತಮ್ಮ ಗ್ರಾಮಗಳಲ್ಲಿ ಸಕ್ರಿಯರಾಗಬೇಕು. ಕಾಂಗ್ರೆಸ್ಗೆ ಹೆಚ್ಚಿನ ಸ್ಥಾನಗಳು ದೊರೆಯುವಂತೆ ನೋಡಿಕೊಳ್ಳಬೇಕು’ ಎಂದು ಮನವಿ ಮಾಡಿದರು.
ನರೇಗಾ ಯೋಜನೆ ಮುಂದುವರಿಸುವಂತೆ ಒತ್ತಾಯಿಸಿ ತಹಶೀಲ್ದಾರ್ ಜಿ.ಸುರೇಂದ್ರಮೂರ್ತಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ಕಾಂಗ್ರೆಸ್ ಗ್ರಾಮಾಂತರ ಘಟಕದ ಅಧ್ಯಕ್ಷ ಬಿ.ಜೆ.ವಿಜಯಕುಮಾರ್ ಮಾತನಾಡಿದರು.
ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮಹೇಶ್, ಎಸ್.ಸಿದ್ದೇಗೌಡ, ಸಿ.ಪಿ.ರಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯಶಂಕರ್, ನಗರ ಅಧ್ಯಕ್ಷ ಎಂ.ಜೆ.ರಮೇಶ್, ವಕ್ತಾರ ಸಯ್ಯದ್ ಜಾಬೀರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಿದ್ದಪ್ಪ, ಮುಖಂಡರಾದ ಮಾರ್ಚಹಳ್ಳಿ ಶ್ರೀನಿವಾಸ್, ಕಲ್ಲಹಳ್ಳಿ ಶ್ರೀನಿವಾಸ್, ಮಧುವನಹಳ್ಳಿ ಎಂ.ನಟರಾಜ್, ಶಾಂತಿರಾಜ್, ರಾಜಯ್ಯ, ತಿಮ್ಮಶೆಟ್ಟಿ, ಅಸ್ಲಂ, ಸರಿತಾ ಜವರಪ್ಪ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.