ADVERTISEMENT

ನಿಪಾ: ಗಡಿ ಬಾವಲಿಯಲ್ಲೂ ನಿಗಾ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2023, 5:19 IST
Last Updated 14 ಸೆಪ್ಟೆಂಬರ್ 2023, 5:19 IST
Venugopala K.
   Venugopala K.

ಮೈಸೂರು: ಕೇರಳದ ಕೊಯಿಕ್ಕೋಡ್‌ ಜಿಲ್ಲೆಯಲ್ಲಿ ಇಬ್ಬರು ‘ನಿಪಾ’ ವೈರಾಣುವಿನ ಜ್ವರದಿಂದ ಮೃತಪಟ್ಟಿರುವ ಹಿನ್ನೆಲೆಯಲ್ಲಿ, ಗಡಿಯಲ್ಲಿ ನಿಗಾ ವಹಿಸಲಾಗಿದೆ. ಈ ಸೋಂಕು ಜಿಲ್ಲೆಯಲ್ಲಿ ಹರಡದಂತೆ ತಡೆಯಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆಯಲ್ಲಿ ಜ್ವರದಿಂದ ಬಳಲುವವರ ಮೇಲೆ ವಿಶೇಷ ನಿಗಾ ಇಡುವಂತೆ ಇಲಾಖೆ ಸೂಚಿಸಿದೆ.

ಜಿಲ್ಲೆಯಲ್ಲಿ ಕೇರಳದಿಂದ ಬರುವವರ ಮೇಲೆ ಬಾ‍ವಲಿಯಲ್ಲಿ ವಿಚಕ್ಷಣೆಗೆ ಕ್ರಮ ವಹಿಸಲಾಗಿದೆ. ಆರೋಗ್ಯ ಸಚಿವರು ಕೂಡ ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

‘ಬುಧವಾರ ಮಧ್ಯಾಹ್ನ 12ರಿಂದ ಗಡಿಯಲ್ಲಿ ನಿಗಾ ವಹಿಸಲಾಗಿದೆ. ಅಲ್ಲಿ ಇಬ್ಬರು ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಥರ್ಮಲ್ ಸ್ಕ್ಯಾನ್ ಮಾಡಿ ಜ್ವರ ತಪಾಸಣೆ ನಡೆಸಿದ ನಂತರ ಪ್ರವೇಶ ಕೊಡುವಂತೆ ಸೂಚಿಸಲಾಗಿದೆ. ಕೇರಳದಿಂದ ಬರುವವರ ಮೇಲೆ ನಿಗಾ ವಹಿಸುವಂತೆ ದೊಡ್ಡಬೈರನಕುಪ್ಪೆ ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚಿಸಲಾಗಿದೆ. ಕರಪತ್ರಗಳನ್ನು ಮುದ್ರಿಸಲಾಗಿದ್ದು, ಅವುಗಳನ್ನು ಹಂಚಿಕೆ ಮಾಡಿ ಜಾಗೃತಿ ಮೂಡಿಸಲಾಗುವುದು’ ಎಂದು ಎಚ್‌.ಡಿ. ಕೋಟೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರವಿ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ಡಿಎಚ್‌ಒ ಡಾ.ಕುಮಾರಸ್ವಾಮಿ, ತಹಶೀಲ್ದಾರ್ ಸಣ್ಣರಾಮಪ್ಪ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರವಿ ಬಾವಲಿ ಹಾಗೂ ದೊಡ್ಡಬೈರನಕುಪ್ಪೆಗೆ ಸೆ.14ರಂದು ಭೇಟಿ ನೀಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.