ADVERTISEMENT

ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2020, 11:05 IST
Last Updated 18 ನವೆಂಬರ್ 2020, 11:05 IST

ಮೈಸೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸುವ ತನ್ನ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯದಿದ್ದರೆ ಕರ್ನಾಟಕ ಬಚಾವೊ, ಸರ್ಕಾರ ಹಠಾವೊ ಎಂಬ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ಪ್ರಜಾಪಾರ್ಟಿಯ ರಾಜ್ಯ ಘಟಕದ ಅಧ್ಯಕ್ಷ ಬಿ.ಶಿವಣ್ಣ ಎಚ್ಚರಿಕೆ ನೀಡಿದರು.

ಇದು ನಿಜಕ್ಕೂ ಕನ್ನಡಿಗರಿಗೆ ಮಾಡುತ್ತಿರುವ ಬಹುದೊಡ್ಡ ಅನ್ಯಾಯ. ಕೇವಲ ಚುನಾವಣೆಗಳನ್ನು ಮಾತ್ರ ಗಮನದಲ್ಲಿಟ್ಟುಕೊಂಡು ಸರ್ಕಾರ ಮರಾಠರ ಓಲೈಕೆಗೆ ಮುಂದಾಗಿದೆ ಎಂದು ಇಲ್ಲಿ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಹರಿಹಾಯ್ದರು.

ಸರ್ಕಾರ ಧರ್ಮ ಧರ್ಮಗಳ ನಡುವೆ, ಜನಾಂಗಗಳ ನಡುವೆ ಹಾಗೂ ಭಾಷೆಗಳ ನಡುವೆ ಕೋಮುಭಾವನೆ ಸೃಷ್ಟಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಕೂಡಲೇ ತನ್ನ ನಿರ್ಧಾರವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ADVERTISEMENT

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸರ್ಕಾರ ವಿಶೇಷವಾಗಿ ಶಕ್ತಿ ತುಂಬುವ ಕಾರ್ಯ ಮಾಡಿಲ್ಲ. ಇದಕ್ಕೆ ಬದಲು ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ₹ 50 ಕೋಟಿ ಹಣ ನೀಡಿರುವುದು ನಿಜಕ್ಕೂ ದೊಡ್ಡ ವಿಪರ್ಯಾಸ ಎಂದು ಬೇಸರ ವ್ಯಕ್ತಪಡಿಸಿದರು.

ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಬಾರ್ಬಾಸಾ ಬೇಯರ್ಸ್ ಮಾತನಾಡಿ, ‘ಸಂಸದ ಪ್ರತಾಪಸಿಂಹ ಅವರು ಸಂಸದೆ ಸುಮಲತಾ ಅವರನ್ನು ಕುರಿತು ಹಗುರವಾಗಿ ಮಾತನಾಡಿದ್ದಾರೆ. ಕೂಡಲೇ ಪ್ರತಾಪಸಿಂಹ ಕ್ಷಮೆ ಕೋರಬೇಕು’ ಎಂದು ಆಗ್ರಹಿಸಿದರು.

ರಾಜ್ಯ ಘಟಕದ ಉಪಾಧ್ಯಕ್ಷ ಯೋಗೇಶ್, ಜಂಟಿ ಕಾರ‌್ಯದರ್ಶಿ ಬಿ.ಆರ್.ಲೋಕೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.