ಜೈಲು (ಪ್ರಾಧಿನಿಧಿಕ ಚಿತ್ರ)
– ಐಸ್ಟಾಕ್ ಚಿತ್ರ
ಮೈಸೂರು: ತಿ.ನರಸೀಪುರ ತಾಲ್ಲೂಕಿನ ಮೂಗೂರು ಗ್ರಾಮದ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿದ್ದ ಪ್ರಕರಣದಲ್ಲಿ ಮಹದೇವಪ್ಪ ಎಂಬಾತನ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 1 ವರ್ಷ ಸಾಧಾರಣ ಜೈಲು ಶಿಕ್ಷೆ ಹಾಗೂ ₹5 ಸಾವಿರ ದಂಡ ವಿಧಿಸಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಸರ್ವೆ ಸಂ. 189ರ 3 ಎಕರೆ 16 ಗುಂಟೆ ಸರ್ಕಾರಿ ಭೂಮಿಯಲ್ಲಿ 1 ಎಕರೆ 24 ಗುಂಟೆಯನ್ನು ಮಹದೇವಪ್ಪ ಹಾಗೂ ಕುಳ್ಳಪ್ಪನ ಒತ್ತುವರಿ ಮಾಡಿದ ಬಗ್ಗೆ ಗ್ರಾಮಸ್ಥರು ದೂರು ನೀಡಿದ್ದು, ತಹಶೀಲ್ದಾರ್ ನೇತೃತ್ವದಲ್ಲಿ ಅದನ್ನು ತೆರವುಗೊಳಿಸಲಾಗಿತ್ತು. ಆದರೆ, ಅವರು ಮತ್ತೆ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದರು. ಈ ಬಗ್ಗೆ ತಹಶೀಲ್ದಾರ್ ತಿ.ನರಸೀಪುರದ ಜೆಎಂಎಫ್ಸಿ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಅಲ್ಲಿ ಭಾಗಶಃ ವಿಚಾರಣೆ ಬಳಿಕ ವಿಶೇಷ ನ್ಯಾಯಾಲಯಕ್ಕೆ ಪ್ರಕರಣ ವರ್ಗಾಯಿಸಲಾಗಿತ್ತು.
ಈ ನಡುವೆ ಎರಡನೇ ಆರೋಪಿ ಕುಳ್ಳಪ್ಪನ ಮೃತಪಟ್ಟಿದ್ದು, ಅವರ ವಿರುದ್ಧದ ಪ್ರಕರಣ ವಜಾಗೊಂಡಿತ್ತು. ಮಹದೇವಪ್ಪ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ‘ಸರ್ಕಾರಿ ಜಮೀನಿನ ಒತ್ತುವರಿಯನ್ನು 60 ದಿನಗಳ ಒಳಗಾಗಿ ತೆರವುಗೊಳಿಸಿ ನ್ಯಾಯಾಲಯಕ್ಕೆ ವರದಿ ನೀಡಬೇಕು’ ಎಂದು ತಹಶೀಲ್ದಾರ್ಗೆ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.