ADVERTISEMENT

ಮೈಸೂರು: ಹಿಂದಿ ಹೇರಿಕೆ ವಿರೋಧಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2021, 9:49 IST
Last Updated 14 ಸೆಪ್ಟೆಂಬರ್ 2021, 9:49 IST
ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನೆಹರೂ ವೃತ್ತದ ಭಾರತೀಯ ಸ್ಟೇಟ್ ಬ್ಯಾಂಕ್ ಕಚೇರಿಯ ಮುಂದೆ ಘೋಷಣೆಗಳನ್ನು ಕೂಗಿದರು
ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನೆಹರೂ ವೃತ್ತದ ಭಾರತೀಯ ಸ್ಟೇಟ್ ಬ್ಯಾಂಕ್ ಕಚೇರಿಯ ಮುಂದೆ ಘೋಷಣೆಗಳನ್ನು ಕೂಗಿದರು   

ಮೈಸೂರು: ಹಿಂದಿ ಹೇರಿಕೆ ವಿರೋಧಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ನಗರದ ಮಹಾತ್ಮ ಗಾಂಧಿ ಚೌಕದಲ್ಲಿ ಹಾಗೂ ನೆಹರೂ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಬ್ಯಾಂಕ್‌ಗಳಲ್ಲಿ ಹಿಂದಿ ಬಳಕೆ ನಿಲ್ಲಿಸಿ, ಕನ್ನಡ ಭಾಷೆಯನ್ನು ಬಳಕೆಗೆ ತರಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನೆಹರೂ ವೃತ್ತದ ಭಾರತೀಯ ಸ್ಟೇಟ್ ಬ್ಯಾಂಕ್ ಕಚೇರಿಯ ಮುಂದೆ ಘೋಷಣೆಗಳನ್ನು ಕೂಗಿದರು.

ಬ್ಯಾಂಕಿನ ಎಲ್ಲ ಸೇವೆಗಳನ್ನು ಕನ್ನಡದಲ್ಲೇ ನೀಡಬೇಕು, ಬ್ಯಾಂಕಿಂಗ್ ನೇಮಕಾತಿಯಲ್ಲಿ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ ಕೊಡಬೇಕು, ಕನ್ನಡ ಬಾರದ ಸಿಬ್ಬಂದಿಯನ್ನು ಅವರ ಮಾತೃಭಾಷೆಗಳ ರಾಜ್ಯಕ್ಕೆ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು.

ADVERTISEMENT

ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಪ್ರವೀಣ್‌ಕುಮಾರ್ ಹಾಗೂ ಇತರರು ಇದ್ದರು.

ಹಿಂದಿ ದಿವಸ್‌ ಆಚರಣೆ ನಿಲ್ಲಿಸಲು ಒತ್ತಾಯ

ರಾಜ್ಯದಲ್ಲಿ ತ್ರಿಭಾಷಾ ನೀತಿ ಬೇಡ. ಹಿಂದಿ ದಿವಸ್‌ ಆಚರಣೆಯನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಕಸ್ತೂರಿ ಕರ್ನಾಟಕ ನ್ಯಾಯಪರ ವೇದಿಕೆ ಕಾರ್ಯಕರ್ತರು ಮಹಾತ್ಮ ಗಾಂಧಿ ಚೌಕದಲ್ಲಿ ಒತ್ತಾಯಿಸಿದರು.

ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಗಿರೀಶ್ ಶಿವಾರ್ಚಕ ಮಾತನಾಡಿ, ‘ಕನ್ನಡಗರಿಗೆ ಕನ್ನಡವೇ ರಾಷ್ಟ್ರ ಭಾಷೆ. ಸೆ. 14ರಂದು ಹಿಂದಿ ದಿವಸ ಆಚರಣೆ ಮಾಡಬೇಕು ಎಂಬ ನಿಯಮವನ್ನು ಕೈಬಿಡಬೇಕು’ ಎಂದು ಆಗ್ರಹಿಸಿದರು.

ಮುಖಂಡರಾದ ಶಿವರಾಜಗೌಡ, ಕುಮಾರ್‌ರಾಜೇ ಅರಸ್, ಧನರಾಜ್, ಕೆ.ಪ್ರಕಾಶ್, ಲೋಕೇಶ್ ಇದ್ದರು.

‘ಉದ್ಯೋಗ ಹಿಂದಿ ಭಾಷಿಕರ ಪಾಲು’

ಕನ್ನಡಾಂಬೆ ರಕ್ಷಣಾ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ರಾಜಶೇಖರ, ‘ಕನ್ನಡಿಗರಿಗೆ ಸಲ್ಲಬೇಕಾದ ಉದ್ಯೋಗವು ಹಿಂದಿ ಭಾಷಿಕರ ಪಾಲಾಗುತ್ತಿದೆ. ಕನ್ನಡ ಮಕ್ಕಳಿಗೆ ಸರ್ಕಾರವೇ ಅನ್ಯಾಯ ಮಾಡುತ್ತಿದೆ’ ಎಂದು ಇಲ್ಲಿನ ಮಹಾತ್ಮ ಗಾಂಧಿ ಚೌಕದಲ್ಲಿ ಹರಿಹಾಯ್ದರು.

ಹಿಂದಿ ದಿವಸ ಆಚರಣೆಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು. ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಅಜಯ್ ಹಾಗೂ ಇತರರು ಇದ್ದರು.

‌ರೈಲು ನಿಲ್ದಾಣದಲ್ಲಿ ಕನ್ನಡ ಬಳಕೆಗೆ ಆಗ್ರಹ

ಕರ್ನಾಟಕ ಜನಸೈನ್ಯ ಸಂಘಟನೆಯ ಕಾರ್ಯಕರ್ತರು ರೈಲು ನಿಲ್ದಾಣದ ಮುಂಭಾಗ ಪ್ರತಿಭಟನೆ ನಡೆಸಿದರು.

ರೈಲು ನಿಲ್ದಾಣಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಕೆ ಮಾಡಬೇಕು, ಮುಂಗಡ ಟಿಕೆಟ್‌ಗಳ ಅರ್ಜಿ ಕನ್ನಡದಲ್ಲಿರಬೇಕು, ತ್ರಿಭಾಷಾ ನೀತಿಯನ್ನು ತೊಲಗಿಸಿ, ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕು, ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಪರಮೇಶ್, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.