ADVERTISEMENT

ಮೈಸೂರು | ಕೇಂದ್ರ–ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

ಜಿಲ್ಲೆಯ ವಿವಿಧೆಡೆ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಜುಲೈ 2020, 16:30 IST
Last Updated 24 ಜುಲೈ 2020, 16:30 IST
ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಮೈಸೂರಿನ ಮಿನಿ ವಿಧಾನಸೌಧದ ಮುಂಭಾಗ ಶುಕ್ರವಾರ ಪ್ರತಿಭಟಿಸಿದರು
ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಮೈಸೂರಿನ ಮಿನಿ ವಿಧಾನಸೌಧದ ಮುಂಭಾಗ ಶುಕ್ರವಾರ ಪ್ರತಿಭಟಿಸಿದರು   

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಶುಕ್ರವಾರ ಜಿಲ್ಲೆಯ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಿತು.

ಮೈಸೂರಿನ ಮಿನಿವಿಧಾನಸೌಧದ ಮುಂಭಾಗ ಜಮಾಯಿಸಿದ ಆಶಾ ಕಾರ್ಯಕರ್ತೆಯರು ಕೇಂದ್ರ–ರಾಜ್ಯ ಸರ್ಕಾರದ ಧೋರಣೆ ವಿರುದ್ಧ ಕಿಡಿಕಾರಿದರು. ಧಿಕ್ಕಾರದ ಘೋಷಣೆಗಳನ್ನು ಮೊಳಗಿಸಿದರು.

ಆಶಾಗಳೇ ಒಂದಾಗಿ, ಹೋರಾಟಕ್ಕೆ ಮುಂದಾಗಿ. ಆಶಾಗಳ ಕಷ್ಟ ಕಾರ್ಪಣ್ಯ ಕೇಳದ ಸರ್ಕಾರ, ಕಣ್ಣೋರೆಸುವ ತಂತ್ರ ಅನುಸರಿಸುವ ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಎಂಬ ಘೋಷಣೆಗಳನ್ನು ಮೊಳಗಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಎಐಟಿಯುಸಿ ಸಂಘಟನೆಯ ಪದಾಧಿಕಾರಿಗಳು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

‘ರಾಜ್ಯದಾದ್ಯಂತ 15 ದಿನಗಳಿಂದ ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆ ಈಡೇರಿಕೆಗೆ ಸರ್ಕಾರವನ್ನು ಒತ್ತಾಯಿಸಿ ಪ್ರತಿಭಟಿಸುತ್ತಿದ್ದಾರೆ. ಆದರೆ ಸರ್ಕಾರದ ಯಾವ ಪ್ರತಿನಿಧಿಯೂ ನಮ್ಮ ಸಮಸ್ಯೆ ಆಲಿಸಲು ಮುಂದಾಗುತ್ತಿಲ್ಲ. ಇದು ಖಂಡನೀಯ’ ಎಂದು ಪ್ರತಿಭಟನನಿರತರು ಆಕ್ರೋಶ ವ್ಯಕ್ತಪಡಿಸಿದರು.

‘ಆಶಾ ಕಾರ್ಯಕರ್ತೆಯರು ಕೋವಿಡ್ ನಿಯಂತ್ರಣ ಹಾಗೂ ಸೋಂಕಿತರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಸಾಕಷ್ಟು ಶ್ರಮಿಸುತ್ತಿದ್ದಾರೆ. ಇವರ ಅಮೂಲ್ಯ ಸೇವೆಯನ್ನು ಸರ್ಕಾರ ಕಡೆಗಣಿಸಿದೆ. ಈ ಸಂದರ್ಭದಲ್ಲಿ ಸುರಕ್ಷಾ ಪರಿಕರಗಳಿಲ್ಲದೇ ಮನೆ ಮನೆಗೆ ತೆರಳಿ ಸರ್ವೆ ಮಾಡಬೇಕಿದೆ. ಸರ್ಕಾರವು ವೇತನ ಭತ್ಯೆಯನ್ನು ಸಮಯಕ್ಕೆ ಸರಿಯಾಗಿ ನೀಡದೆ ಶೋಷಣೆ ಮಾಡುತ್ತಿದೆ. ಆದರಿಂದ್ದ ನಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರೆಸುತ್ತೇವೆ’ ಎಂದರು.

‘ಆಶಾ ಕಾರ್ಯಕರ್ತೆಯರಿಗೆ ಸರ್ಕಾರ ಪ್ರತಿ ತಿಂಗಳು ₹ 12 ಸಾವಿರ ಗೌರವಧನ ನೀಡಬೇಕು. ಅಗತ್ಯವಿರುವ ಕೋವಿಡ್ ಸುರಕ್ಷಾ ಸಾಮಗ್ರಿಗಳನ್ನು ವಿತರಿಸುವ ಜೊತೆಗೆ, ಸೋಂಕಿನಿಂದ ಮೃತಪಟ್ಟ ಕಾರ್ಯಕರ್ತೆಯರಿಗೆ ಸೂಕ್ತ ಪರಿಹಾರ ಮತ್ತು ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸಬೇಕು’ ಎಂದು ಅಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.