ADVERTISEMENT

ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ

ದೂರು ನೀಡಲು ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಸಲಹೆ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2020, 6:47 IST
Last Updated 17 ಡಿಸೆಂಬರ್ 2020, 6:47 IST
ಮೈಸೂರಿನ ಚಾಮುಂಡಿ ಅತಿಥಿಗೃಹದಲ್ಲಿ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಅವರು ಪೌರಕಾರ್ಮಿಕರ ವಿವಿಧ ಸಂಘಟನೆಗಳ ಮುಖಂಡರೊಂದಿಗೆ ಬುಧವಾರ ಸಭೆ ನಡೆಸಿದರು
ಮೈಸೂರಿನ ಚಾಮುಂಡಿ ಅತಿಥಿಗೃಹದಲ್ಲಿ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಅವರು ಪೌರಕಾರ್ಮಿಕರ ವಿವಿಧ ಸಂಘಟನೆಗಳ ಮುಖಂಡರೊಂದಿಗೆ ಬುಧವಾರ ಸಭೆ ನಡೆಸಿದರು   

ಮೈಸೂರು: ಸರ್ಕಾರದ ಆದೇಶವಿದ್ದರೂ ಒಳಚರಂಡಿ ಕಾರ್ಮಿಕರ ಉದ್ಯೋಗ ಕಾಯಂಗೊಳಿಸಲು ಕ್ರಮ ಕೈಗೊಳ್ಳಲು ಪಾಲಿಕೆ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪ ಪೌರಕಾರ್ಮಿಕರಿಂದ ವ್ಯಕ್ತವಾಯಿತು.

ಇಲ್ಲಿನ ಚಾಮುಂಡಿ ಅತಿಥಿಗೃಹದಲ್ಲಿ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ ಅವರು ಕರೆದಿದ್ದ ಸಭೆಯಲ್ಲಿ ಪಾಲ್ಗೊಂಡ ಬಹುತೇಕ ಎಲ್ಲ ಸಂಘಟನೆಗಳ ಮುಖಂಡರು ಪಾಲಿಕೆ ಅಧಿಕಾರಿಗಳ ವಿರುದ್ಧ ಹರಿಹಾಯ್ದರು.

ಈಗಾಗಲೇ 280 ಹುದ್ದೆಗಳು ಖಾಲಿ ಇವೆ. ಹಾಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ 231 ಜನ ಒಳಚರಂಡಿ ಪೌರಕಾರ್ಮಿಕರನ್ನು ನೇಮಕ ಮಾಡಬಹುದು. ಆದರೆ, ಅಧಿಕಾರಿಗಳಲ್ಲಿ ಇರುವ ಜಡತ್ವದಿಂದ ಸ್ಪಂದನೆಯೇ ಇಲ್ಲದಂತಾಗಿದೆ. ಆಯುಕ್ತರಿಗೆ ನೋಟಿಸ್ ನೀಡಬೇಕು ಎಂದು ಆಗ್ರಹಿಸಿದರು.

ADVERTISEMENT

ಪೌರಕಾರ್ಮಿಕರನ್ನು ಕಾಯಂಗೊಳಿಸುವ ಸಂದರ್ಭದಲ್ಲಿ ಉದ್ದೇಶಪೂರ್ವಕವಾಗಿಯೇ ಒಳಚರಂಡಿ ಕೆಲಸ ಮಾಡುವ ಪೌರಕಾರ್ಮಿಕರನ್ನು ಪಟ್ಟಿಯಿಂದ ಕೈಬಿಡಲಾಯಿತು. ಇವರಿಗೆ ಸಹಾಯಕರು ಎಂದು ಕರೆದು ಅನ್ಯಾಯ ಮಾಡಲಾಗಿದೆ ಎಂದು ದೂರಿದರು.

ಮುಖಂಡ ರಾಚಯ್ಯ ಮಾತನಾಡಿ, ‘ಕಾಯಂ ಆಗದೇ ಇರುವ ಪೌರಕಾರ್ಮಿಕರು ಮೃತಪಟ್ಟರೆ ಅವರಿಗೆ ಪರಿಹಾರ ಸಿಕ್ಕುವುದಿಲ್ಲ. 30 ವರ್ಷಗಳಷ್ಟು ಕಾಲ ಕೆಲಸ ಮಾಡಿದವರೂ ಇಲ್ಲಿದ್ದಾರೆ. ಈಗಲಾದರೂ ಸಮಸ್ಯೆ ಬಗೆಹರಿಸಬೇಕು’ ಎಂದು ಮನವಿ ಮಾಡಿದರು.

ಆಧುನಿಕ ಯಂತ್ರೋಪಕರಣಗಳಿದ್ದರೂ ಪೌರಕಾರ್ಮಿಕರು ಗುಂಡಿಯೊಳಗೆ ಇಳಿಯಲೇಬೇಕಿದೆ. ಕೈಗಳಿಂದಲೇ ಮಲವನ್ನು ಸ್ವಚ್ಛಗೊಳಿಸಲೇಬೇಕಿದೆ. ಇದು ವಾಸ್ತವ ಎಂದು ಅವರು ಹೇಳಿದರು.

ಮುಖಂಡರಾದ ಎನ್.ಮಾರ, ಆರ್.ಆರ್.ರಮೇಶ್, ಅರುಣ್‌ಕುಮಾರ್, ರಾಜೀವ್, ಗಣೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.