ADVERTISEMENT

ಕೋವಿಡ್‌ ಪ್ರಕರಣ ಹೆಚ್ಚಳ: ಆತಂಕ ಬೇಡ- ಸಚಿವ ಸುಧಾಕರ್‌

​ಪ್ರಜಾವಾಣಿ ವಾರ್ತೆ
Published 14 ಜೂನ್ 2022, 13:19 IST
Last Updated 14 ಜೂನ್ 2022, 13:19 IST
ಸಚಿವ ಡಾ. ಕೆ. ಸುಧಾಕರ್
ಸಚಿವ ಡಾ. ಕೆ. ಸುಧಾಕರ್    

ಮೈಸೂರು: ‘ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದರೂ, ಸೋಂಕಿನ ತೀವ್ರತೆ ಹಾಗೂ ಲಕ್ಷಣಗಳು ಸೌಮ್ಯವಾಗಿವೆ. ಹೀಗಾಗಿ ನಾಗರಿಕರು ಆತಂಕ ಪಡುವ ಅಗತ್ಯವಿಲ್ಲ’ ಎಂದು ಸಚಿವ ಡಾ. ಕೆ. ಸುಧಾಕರ್ ಹೇಳಿದರು.

ಬೆಂಗಳೂರಿನ ಎರಡು ಶಾಲೆಗಳಲ್ಲಿ 30ಕ್ಕೂ ಹೆಚ್ಚು ಮಕ್ಕಳಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮಂಗಳವಾರ ಇಲ್ಲಿನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತರಗತಿಯಲ್ಲಿ 10ರಿಂದ 12 ಮಕ್ಕಳಿಗೆ ಸೋಂಕು ದೃಢಪಟ್ಟರೆ ಶಾಲೆಗೆ ರಜೆ ನೀಡಲಾಗುತ್ತಿದೆ’ ಎಂದರು.

‘ಮೈಸೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೋವಿಡ್‌ ದೃಢ ಪ್ರಕರಣಗಳ ಪ್ರಮಾಣ ಶೇ 1ಕ್ಕಿಂತ ಕಡಿಮೆಯಿದ್ದು, ಸಾವು– ನೋವು ಸಂಭವಿಸಿದ ವರದಿಯಾಗಿಲ್ಲ. ನಿತ್ಯ ಪ್ರತಿ ಜಿಲ್ಲೆಯಲ್ಲಿ 500 ಕೋವಿಡ್‌ ಪರೀಕ್ಷೆ ನಡೆಸುತ್ತಿರುವುದರಿಂದ ಪರೀಕ್ಷೆಯನ್ನು ಹೆಚ್ಚಳಗೊಳಿಸುವ ಅಗತ್ಯವಿಲ್ಲ’ ಎಂದು ಪ್ರತಿಕ್ರಿಯಿಸಿದರು.

ADVERTISEMENT

‘12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ಹಾಕಿಸಲು ಪೋಷಕರು ಗಮನಹರಿಸಬೇಕು. ಜನ ದಟ್ಟಣೆ, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸುವುದು ಸೇರಿದಂತೆ ಕೋವಿಡ್‌ ಮಾರ್ಗಸೂಚಿ ಪಾಲಿಸಬೇಕು’ ಎಂದು ಹೇಳಿದ ಅವರು, ‘ಕೇಂದ್ರದಿಂದ ಹೊಸ ಕೋವಿಡ್‌ ಮಾರ್ಗಸೂಚಿ ಬಂದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.