ಪಿರಿಯಾಪಟ್ಟಣ: ಪಟ್ಟಣದ ಜಿಜೆಸಿಪಿ ಕಾಲೇಜು ಮೈದಾನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ತಾಲ್ಲೂಕಿನ 32 ಗ್ರಾಮ ಪಂಚಾಯಿತಿಗಳಿಗೆ ಘನತ್ಯಾಜ್ಯ ವಿಲೇವಾರಿ ವಾಹನಗಳನ್ನು ಸಂಸದ ಪ್ರತಾಪ ಸಿಂಹ ವಿತರಿಸಿದರು.
ಬಳಿಕ ಮಾತನಾಡಿದ ಅವರು, ‘ಕೇಂದ್ರ ಸರ್ಕಾರವು ಸ್ವಚ್ಛ ಭಾರತ್ ಮಿಷನ್ ಕಾರ್ಯಕ್ರಮದಡಿ ಸ್ವಚ್ಛತೆಗೆ ಹೆಚ್ಚು ಒತ್ತು ನೀಡುತ್ತಿದೆ. ಗ್ರಾ.ಪಂ.ಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಹಾಗೂ ಕಸ ವಿಲೇವಾರಿ ವಾಹನ ನೀಡಲಾಗುತ್ತಿದೆ’ ಎಂದು ಹೇಳಿದರು.
‘ನರೇಗಾ ಯೋಜನೆಯಡಿ ತಾಲ್ಲೂಕಿನಲ್ಲಿ 150 ಕೆರೆಕಟ್ಟೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ 150 ಕೆರೆಗಳ ಅಭಿವೃದ್ಧಿಗೆ ಕ್ರಿಯಾಯೋಜನೆ ಸಿದ್ಧಪಡಿಸಲಾಗುತ್ತದೆ. ಪಟ್ಟಣದ ಶಕ್ತಿ ದೇವತೆ ಮಸಣೀಕಮ್ಮ ದೇವಾಲಯ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ’ ಎಂದರು.
ತಾಲ್ಲೂಕು ಪಂಚಾಯಿತಿ ಇಒ ಸಿ.ಆರ್. ಕೃಷ್ಣಕುಮಾರ್ ಮಾತನಾಡಿ, ‘₹1.75 ಕೋಟಿ ವೆಚ್ಚದಲ್ಲಿ 32 ವಾಹನ ಖರೀದಿಸಿ, ಸ್ವಚ್ಛತೆಗೆ ಆದ್ಯತೆ ನೀಡಲಾಗುತ್ತಿದೆ’ ಎಂದು ತಿಳಿಸಿದರು.
ಪುರಸಭೆ ಅಧ್ಯಕ್ಷ ಮಂಜುನಾಥ್ ಸಿಂಗ್, ಸದಸ್ಯ ನಿರಂಜನ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಅಣ್ಣಯ್ಯಶೆಟ್ಟಿ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಎಂ. ಎಂ.ರಾಜೇಗೌಡ, ಐಟಿಸಿ ಕಾರ್ಯಕ್ರಮ ಸಂಯೋಜಕ ಮನೋಜ್, ಮೈಕ್ಯಾಪ್ ಕಾರ್ಯಕ್ರಮ ಸಮನ್ವಯಾಧಿಕಾರಿ ಶಂಕರ್, ಜಿ.ಪಂ ಯೋಜನಾ ಸಂಯೋಜಕ ಪ್ರದೀಪ್, ತಾ.ಪಂ ಸಹಾಯಕ ನಿರ್ದೇಶಕರಾದ ಜಿ.ಸಿ.ಮಹದೇವ್, ಕರುಣಾಕರ್, ಕಚೇರಿ ವ್ಯವಸ್ಥಾಪಕ ಗಜೇಂದ್ರಕುಮಾರ್, ಚಂದ್ರಕಾಂತ್ ಇದ್ದರು.
***
ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಕಾರ್ಯ ಶ್ಲಾಘನೀಯ.
-ಕೆ.ಮಹದೇವ್, ಶಾಸಕ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.