ADVERTISEMENT

‘ವನ್ಯಜೀವಿ ಜೊತೆ ಸಹಬಾಳ್ವೆ ಅಗತ್ಯ’

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸುವರ್ಣ ಮಹೋತ್ಸವ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2025, 4:29 IST
Last Updated 28 ಅಕ್ಟೋಬರ್ 2025, 4:29 IST

ಮೈಸೂರು: ‘ಅರಣ್ಯ ನಾಶದಿಂದ ಮಾನವ– ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದೆ‌. ಕಾಡುಪ್ರಾಣಿಗಳೊಂದಿಗೆ ಸಹಬಾಳ್ವೆ ಇಂದಿನ ಅಗತ್ಯವಾಗಿದೆ’ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ, ಮೈಸೂರು ಮತ್ತು ಕೊಡಗು ಜಿಲ್ಲಾಡಳಿತದ ಸಹಯೋಗದಲ್ಲಿ ಮಹಾರಾಜ ಕಾಲೇಜು ಮೈದಾನದಲ್ಲಿ ಸೋಮವಾರ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ಕಾಡಂಚಿನ ಜನರಿಗೆ ಮತ್ತು ಮಕ್ಕಳಿಗೆ ವನ್ಯಜೀವಿಗಳ ಸ್ವಭಾವದ ಬಗ್ಗೆ ಮತ್ತು ಸಹಬಾಳ್ವೆಯ ಬಗ್ಗೆ ತಿಳಿಹೇಳುವ ಅಗತ್ಯವಿದೆ. ಈ ಕಾರ್ಯವನ್ನು ಸರ್ಕಾರೇತರ ಸಂಸ್ಥೆಗಳು ಮತ್ತು ಅರಣ್ಯ ಸಿಬ್ಬಂದಿ ಮಾಡಬೇಕು’ ಎಂದರು.

‘ಪ್ರಕೃತಿ ವಿಕೋಪಕ್ಕೆ ಮಾನವನ ಮಿತಿಮೀರಿದ ಹಸ್ತಕ್ಷೇಪವೇ ಕಾರಣ. ಅರಣ್ಯ ನಾಶ, ಅಂತರ್ಜಲದ ಅತಿಯಾದ ಬಳಕೆಯಿಂದ ಅನಾಹುತಗಳು ಹೆಚ್ಚುತ್ತಿವೆ. ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ಗುಡ್ಡ ಕುಸಿತ, ವಯನಾಡು ದುರಂತ ಈಚಿನ ಉದಾಹರಣೆಗಳು. ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನ ಏರಿಕೆ ಇಂದಿನ ಬಹುದೊಡ್ಡ ಸವಾಲುಗಳು. ಇಂತಹ ಅನಾಹುತ ತಪ್ಪಬೇಕಾದರೆ ಪ್ರಕೃತಿ ಪರಿಸರದ ಕಾಳಜಿ ವಹಿಸಬೇಕು’ ಎಂದರು.

ADVERTISEMENT

‘ಇಂದಿರಾಗಾಂಧಿ ಅವರು ದೂರದೃಷ್ಟಿಯಿಂದ ಜಾರಿಗೆ ತಂದ ಅರಣ್ಯ ಸಂರಕ್ಷಣಾ ಕಾಯ್ದೆಗಳು ದೇಶದಲ್ಲಿ ಪರಿಸರ ಮತ್ತು ವನ್ಯಜೀವಿಗಳ ಉಳಿವಿಗೆ ಕಾರಣವಾಗಿದೆ’ ಎಂದು ಸ್ಮರಿಸಿದ ಸಚಿವರು, ‘ಮೈಸೂರು ನಗರವನ್ನು ಏಕಬಳಕೆ ಪ್ಲಾಸ್ಟಿಕ್ ಮುಕ್ತ ನಗರ ಎಂದು ಸರ್ಕಾರ ಘೋಷಿಸಿದ್ದು, ಮಂಡಳಿಯ ಅಧಿಕಾರಿಗಳೊಂದಿಗೆ ಸಾರ್ವಜನಿಕರೂ ಈ ಕಾರ್ಯದಲ್ಲಿ ಕೈ ಜೋಡಿಸಬೇಕು’ ಎಂದು ಕೋರಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ‘ಪರಿಸರ ಮಾಲಿನ್ಯ ನಿಯಂತ್ರಣ ಎಂಬುದು ಇಂದು ವಿಜ್ಞಾನ ವಿಷಯದ ಒಂದು ಭಾಗವಾಗಿದೆ. ಪರಿಸರವನ್ನು ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಬೇಕು’ ಎಂದು ಆಶಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ, ‘ಮಂಡಳಿಗೆ 50 ವರ್ಷ ತುಂಬಿದ ಅಂಗವಾಗಿ ಪ್ರತಿ ಜಿಲ್ಲೆಯಲ್ಲೂ ಕಾರ್ಯಕ್ರಮ ಆಯೋಜಿಸುತ್ತಿದ್ದು, ‌ನ.19ರಂದು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ ನಡೆಯಲಿದೆ. ಪರಿಸರ ಸಂರಕ್ಷಣೆ ವಿಷಯವಾಗಿ ರೀಲ್ಸ್ ಸ್ಪರ್ಧೆ ಆಯೋಜಿಸಿದ್ದು, ವಿಜೇತರಿಗೆ ₹50 ಸಾವಿರ ನಗದು ಬಹುಮಾನ ಸಿಗಲಿದೆ’ ಎಂದರು.

ಶಾಸಕ ಕೆ. ಹರೀಶ್ ಗೌಡ ಅಧ್ಯಕ್ಷತೆ ವಹಿಸಿದ್ದರು. ಅರಣ್ಯ ವಸತಿ ಮತ್ತು ವಿಹಾರಧಾಮಗಳ ನಿಗಮದ ಅಧ್ಯಕ್ಷ ಅನಿಲ್‌ ಕುಮಾರ್, ಶಾಸಕ ಜಿ.ಟಿ. ದೇವೇಗೌಡ, ವಿಧಾನ ಪರಿಷತ್ ಸದಸ್ಯರಾದ ಡಾ. ಡಿ.ತಿಮ್ಮಯ್ಯ, ಡಾ. ಯತೀಂದ್ರ ಸಿದ್ದರಾಮಯ್ಯ, ಕೆ.ಶಿವಕುಮಾರ್, ಕಾವೇರಿ ಜಲಾನಯನ ಯೋಜನೆಯ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷ ಮರಿಸ್ವಾಮಿ, ರಾಜ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿ ಎಸ್.ಎಸ್. ಲಿಂಗರಾಜು, ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವರಾಜು, ಜಿ.ಪಂ. ಸಿಇಒ ಎಸ್.ಯುಕೇಶ್ ಕುಮಾರ್, ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಉಪಸ್ಥಿತರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.