ಮೈಸೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ಪಿಸಿಬಿ) ಸ್ಥಾಪನೆಯಾಗಿ 50 ವರ್ಷಗಳು ಪೂರೈಸಿದ್ದು, ಅ.27ರಂದು ನಗರದಲ್ಲಿ ‘ಸುವರ್ಣ ಮಹೋತ್ಸವ’ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿಯಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
‘ಕಾರ್ಯಕ್ರಮ ಆಯೋಜಿಸಲು ಉತ್ತಮ ಸ್ಥಳ ಗುರುತಿಸಿ, ಮೈಸೂರು ಹಾಗೂ ಕೊಡಗು ಜಿಲ್ಲೆಗೆ ಸೇರಿದಂತೆ ಸಂಘಟಿಸಲಾಗುವುದು. ಸಂಘ– ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಸ್ಥಳೀಯ ಪರಿಸರವಾದಿಗಳು, ಕೈಗಾರಿಕೋದ್ಯಮಿಗಳು ಭಾಗವಹಿಸಲು ಆಹ್ವಾನ ನೀಡಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.
‘ಕಾರ್ಯಕ್ರಮ ಉತ್ತಮವಾಗಿ ಆಯೋಜಿಸುವ ಉದ್ದೇಶದಿಂದ ಸ್ವಾಗತ, ವೇದಿಕೆ, ಆಹಾರ ಸೇರಿದಂತೆ ವಿವಿಧ ಸಮಿತಿ ರಚಿಸಲಾಗಿದೆ. ಅಧಿಕಾರಿಗಳು ಯಾವುದೇ ಲೋಪ ಆಗದಂತೆ ಜವಾಬ್ದಾರಿ ನಿರ್ವಹಿಸಬೇಕು’ ಎಂದರು.
‘ಇ-ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ, ಘನ ತ್ಯಾಜ್ಯ, ಜಲ ಹಾಗೂ ವಾಯುಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಸಲಾಗುವುದು. ಪರಿಸರ ಸಂರಕ್ಷಣೆ ಕುರಿತಾಗಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲೂ ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಸಲಾಗುವುದು’ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸಿಇಒ ಎಸ್. ಯುಕೇಶ್ ಕುಮಾರ್, ನಗರ ವಿಭಾಗದ ಪರಿಸರ ಅಧಿಕಾರಿ ವಿ.ಎಸ್. ಕುಮಾರ್, ಗ್ರಾಮೀಣ ವಿಭಾಗದ ಪರಿಸರ ಅಧಿಕಾರಿ ವಿ. ಸುನೀಲ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.