ಪ್ರತಾಪ ಸಿಂಹ
ಮೈಸೂರು: ‘ಸಹಜವಾಗಿಯೇ ನಾನು ರಾಜ್ಯ ರಾಜಕಾರಣಕ್ಕೆ ಬಂದಿದ್ದೇನೆ. ಕೇಂದ್ರದ ರಾಜಕಾರಣ ಮುಗಿದ ಮೇಲೆ ರಾಜ್ಯಕ್ಕೆ ಬರಲೇಬೇಕು ತಾನೆ?’ ಎಂದು ಮಾಜಿ ಸಂಸದ ಬಿಜೆಪಿಯ ಪ್ರತಾಪ ಸಿಂಹ ಹೇಳಿದರು.
ಇಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ‘ಎಲ್ಲಾ ದೃಷ್ಟಿಯಿಂದಲೂ ಚಾಮರಾಜ ವಿಧಾನಸಭಾ ಕ್ಷೇತ್ರ ನನಗೆ ಅನುಕೂಲಕರವಾಗಿದೆ. ಹೀಗಾಗಿ ಅದೇ ನನ್ನ ಆಯ್ಕೆಯಾಗಿರುತ್ತದೆ. ಈ ಹಿಂದೆ ಎಚ್.ಎಸ್.ಶಂಕರಲಿಂಗೇಗೌಡ ಅವರು ನಾಲ್ಕು ಬಾರಿ ಈ ಕ್ಷೇತ್ರದಿಂದ ಬಿಜೆಪಿಯಿಂದ ಗೆದ್ದಿದ್ದರು. ಇದು ಬಿಜೆಪಿ ಕ್ಷೇತ್ರ. ಹೀಗಾಗಿ ಇಲ್ಲಿಂದಲೇ ಚಟುವಟಿಕೆ ಆರಂಭಿಸಿದ್ದೇನೆ’ ಎಂದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತವನ್ನು ಅವರು ವ್ಯಕ್ತಪಡಿಸಿದರು.
‘ಚಾಮರಾಜ ಕ್ಷೇತ್ರ ಹಣದ ಪ್ಯಾಕೆಟ್ ಕೊಟ್ಟು ಗೆಲ್ಲುವ ಕಣವಲ್ಲ. ಇಲ್ಲಿನ ಮತದಾರರು ಕೆಲಸ ನೋಡಿ ಪ್ರೀತಿ ತೋರಿಸುತ್ತಾರೆ. ಒಕ್ಕಲಿಗ ಸಮಾಜದ ಲೆಕ್ಕದಲ್ಲಿ ಈ ಕ್ಷೇತ್ರವನ್ನು ನಾನು ನೋಡುತ್ತಿಲ್ಲ. ಇಲ್ಲಿ ಎಲ್ಲ ವರ್ಗದ ಜನರೂ ಇದ್ದಾರೆ. ಪ್ರಜ್ಞಾವಂತರು, ಬುದ್ಧಿವಂತರಿದ್ದಾರೆ. ಆದ್ದರಿಂದ ಆಯ್ಕೆ ಮಾಡಿಕೊಂಡಿದ್ದೇನೆ’ ಎಂದು ಪ್ರತಿಕ್ರಿಯಿಸಿದರು.
ಪತ್ರಕರ್ತರಾಗಿದ್ದ ಪ್ರತಾಪ ಸಿಂಹ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದಿಂದ ಸತತ ಎರಡು ಬಾರಿ (2014 ಹಾಗೂ 2019) ಬಿಜೆಪಿ ಟಿಕೆಟ್ ಮೇಲೆ ಗೆದ್ದಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಅವರಿಗೆ ಪಕ್ಷದಿಂದ ಟಿಕೆಟ್ ನಿರಾಕರಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.