ಮೈಸೂರು: ನಗರದಲ್ಲಿ ಜೂನ್ 21ರಂದು ಪ್ರಧಾನಿ ನರೇಂದ್ರ ಅವರು ಪಾಲ್ಗೊಳ್ಳಲಿರುವ ಯೋಗ ದಿನ ಕಾರ್ಯಕ್ರಮಕ್ಕೆ ತಯಾರಿಯ ಭಾಗವಾಗಿ ಕೇಂದ್ರ ಆಯುಷ್ ಮಂತ್ರಾಲಯದ ಅಧಿಕಾರಿಗಳ ತಂಡವು ಜೂನ್ 2ರಂದು ಇಲ್ಲಿಗೆ ಭೇಟಿ ನೀಡಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಗೌತಮ್ ಬಗಾದಿ ಅವರ ನೇತೃತ್ವದಲ್ಲಿ ಅಧಿಕಾರಿಗಳ ಸಭೆಯನ್ನು ಬುಧವಾರ ನಡೆಸಲಾಗಿದೆ.
ಜಿಲ್ಲಾಡಳಿತದಿಂದ ನಡೆದಿರುವ ಪೂರ್ವ ಸಿದ್ಧತೆಯ ಕುರಿತು ಚರ್ಚಿಸಲಾಯಿತು. ಹಿಂದಿನ ವರ್ಷಗಳಲ್ಲಿ ರಚಿಸಿದ್ದಂತೆಯೇ 11 ಸಮಿತಿಗಳನ್ನು ರಚಿಸುವುದಕ್ಕೆ ಮತ್ತು ಕೇಂದ್ರದ ಅಧಿಕಾರಿಗಳ ಸೂಚನೆಯಂತೆ ಮುಂದಿನ ಕಾರ್ಯಕ್ರಮಗಳನ್ನು ರೂಪಿಸಲು ತೀರ್ಮಾನಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಅಂಬಾವಿಲಾಸ ಅರಮನೆಯ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ. 12ಸಾವಿರದಿಂದ 15ಸಾವಿರ ಮಂದಿ ಭಾಗವಹಿಸಲು ಅವಕಾಶ ಇರುತ್ತದೆ. ಯಾವುದೇ ಲೋಪವಿಲ್ಲದೆ ನಡೆಸಲು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಎಸ್ಪಿ ಆರ್. ಚೇತನ್, ಜಿಲ್ಲಾ ಪಂಚಾಯ್ತಿ ಸಿಇಒ ಬಿ.ಆರ್. ಪೂರ್ಣಿಮಾ, ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಪ್ರದೀಪ್ ಗುಂಟಿ, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಎಂ.ಎಸ್. ಗೀತಾ ಪ್ರಸನ್ನ, ಮಹಾನಗರಪಾಲಿಕೆ ಆಯುಕ್ತ ಜಿ. ಲಕ್ಷ್ಮಿಕಾಂತ ರೆಡ್ಡಿ ಹಾಗೂ ಮುಡಾ ಆಯುಕ್ತ ಜಿ.ಟಿ. ದಿನೇಶ್ಕುಮಾರ್ ಮೊದಲಾದವರು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.