ಮೈಸೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ, ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ಹಾಗೂ ಶರಣ ಮಂಡಲಿ ವತಿಯಿಂದ ಕುವೆಂಪು ಜನ್ಮದಿನಾಚರಣೆ ಪ್ರಯುಕ್ತ ಐವರು ಸಾಧಕರಿಗೆ ‘ಅನಿಕೇತನ’ ಪ್ರಶಸ್ತಿಯನ್ನು ಗುರುವಾರ ಪ್ರದಾನ ಮಾಡಲಾಯಿತು.
ಸಾಹಿತಿ ಪ್ರೊ.ಕೆ.ಎಸ್.ಭಗವಾನ್, ನಿವೃತ್ತ ಪ್ರಾಧ್ಯಾಪಕ ಬಿ.ಪಿ.ಮಹೇಶ್ಚಂದ್ರಗುರು, ಸಮಾಜ ಸೇವಕ ರಘುರಾಂ ವಾಜಪೇಯಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಬಿ.ಸೋಮೇಗೌಡ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಮಾಲಂಗಿ ಸುರೇಶ್ ಅವರು ಕಾಂಗ್ರೆಸ್ ಮುಖಂಡ ಎಂ.ಕೆ.ಸೋಮಶೇಖರ್ ಅವರಿಂದ ಇಲ್ಲಿನ ಪತ್ರಿಕಾ ಭವನದಲ್ಲಿ ಪ್ರಶಸ್ತಿ ಸ್ವೀಕರಿಸಿದರು.
ಈ ವೇಳೆ ಮಾತನಾಡಿದ ಎಂ.ಕೆ.ಸೋಮಶೇಖರ್, ‘ಈಗಿನ ಸರ್ಕಾರ ಮೌಢ್ಯಗಳನ್ನು ಬಿತ್ತುತ್ತಿದೆ. ಸತ್ಯವನ್ನು ಮುಚ್ಚಿ ಹಾಕುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.
ಬುದ್ದ, ಬಸವ, ಅಂಬೇಡ್ಕರ್ ಸೇರಿದಂತೆ ಹಲವು ಸಂತರು ವೈಚಾರಿಕತೆಯನ್ನು ಬೋಧಿಸಿದರು. ಆದರೆ, ಅದರ ಪರಿಪಾಲನೆ ಆಗುತ್ತಿಲ್ಲ. ಮೌಢ್ಯದಿಂದ ಹೊರಬರಲು ಇನ್ನೆಷ್ಟು ಸಂತರು ಹುಟ್ಟಬೇಕೋ ಗೊತ್ತಾಗುತ್ತಿಲ್ಲ. ವೈಚಾರಿಕತೆಗೆ ಗುಂಡು ಹೊಡೆಯುವ ಕೆಲಸ ಆಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಸಾಮಾಜಿಕ ಮಾಧ್ಯಮಗಳ ಮೂಲಕ ಸುಳ್ಳುಗಳನ್ನು ವ್ಯಾಪಕವಾಗಿ ಹರಡಲಾಗುತ್ತಿದೆ. ಈ ಕೆಲಸಕ್ಕೆ ಕೋಟ್ಯಂತರ ರೂಪಾಯಿ ಹಣವನ್ನು ಸುರಿಯಲಾಗುತ್ತಿದೆ. ಸತ್ಯವನ್ನು ಮುಚ್ಚಿ ಹಾಕುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ ಎಂದರು.
ಮೈಸೂರು ವಿಶ್ವವಿದ್ಯಾನಿಲಯದ ಡಿ.ದೇವರಾಜ ಅರಸು ಅಧ್ಯಯನ ಪೀಠದ ಸಂದರ್ಶಕ ಪ್ರಾಧ್ಯಾಪಕ ಡಾ.ಎಂ.ಜಿ.ಆರ್.ಅರಸ್ ಮಾತನಾಡಿ, ‘ಕುವೆಂಪು ಅವರು ಮೌಢ್ಯದಿಂದ ಹೊರಬರಲು ಕರೆ ನೀಡಿದ್ದರು. ನಾನೂ ಅವರ ಮಾತುಗಳನ್ನು ಕೇಳಿ ಜೀವನದಲ್ಲಿ ಅಳವಡಿಸಿಕೊಂಡೆ’ ಎಂದು ಹೇಳಿದರು.
ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಶಿವರಾಮು, ಶರಣ ಮಂಡಲಿಯ ಅಧ್ಯಕ್ಷ ಮೂಗೂರು ನಂಜುಂಡಸ್ವಾಮಿ,ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ರಾಜ್ಯಾಧ್ಯಕ್ಷ ಡಾ.ಸಿ ವೆಂಕಟೇಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.