ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಟಲ್ಬಿಹಾರಿ ವಾಜಪೇಯಿ ಜನ್ಮದಿನದ ಪ್ರಯುಕ್ತ ಡಿ. 25ರಂದು 9 ಕೋಟಿ ರೈತರಿಗೆ ₹ 18 ಸಾವಿರ ಕೋಟಿಯನ್ನು ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುವ ಕಾರ್ಯಕ್ರಮದ ನೇರಪ್ರಸಾರವನ್ನು ಇಲ್ಲಿನ ನಗರ ಬಿಜೆಪಿ ಕಚೇರಿಯಲ್ಲಿ ಏರ್ಪಡಿಸಲಾಗಿದೆ.
ಅಂದು ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದೇ ವೇಳೆ ಕಚೇರಿಯಲ್ಲಿ ರೈತರನ್ನು ಸನ್ಮಾನಿಸಲಾಗುತ್ತದೆ. ಇದೇ ಬಗೆಯ ಕಾರ್ಯಕ್ರಮಗಳು ಪಕ್ಷದ ಪ್ರತಿ ಮಂಡಲಗಳಲ್ಲೂ ನಡೆಯಲಿವೆ ಎಂದು ಇಲ್ಲಿ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಎಂ.ರಾಜೇಂದ್ರ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಾಂಗ್ರೆಸ್ ತನ್ನ ಅಧಿಕಾರದ ಅವಧಿಯಲ್ಲಿ ₹ 57 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದೆ. ಆದರೆ, ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಒಂದೇ ವರ್ಷದಲ್ಲಿ ₹ 72 ಸಾವಿರ ಪ್ರೋತ್ಸಾಹ ಧನವನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಿದೆ ಎಂದರು.
ಕಳೆದ 60 ವರ್ಷಗಳಲ್ಲಿ ಕಾಂಗ್ರೆಸ್ ಕೃಷಿ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ನರೇಂದ್ರ ಮೋದಿ ಅವರು ತಮ್ಮ ಮೊದಲ 5 ವರ್ಷಗಳ ಅವಧಿಯಲ್ಲಿಯೇ ಪೂರ್ಣಗೊಳಿಸಿದ್ದಾರೆ ಎಂದು ಶ್ಲಾಘಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.