ADVERTISEMENT

ಪೌರಕಾರ್ಮಿಕರ ಕಾಯಂಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 6 ಜುಲೈ 2020, 9:08 IST
Last Updated 6 ಜುಲೈ 2020, 9:08 IST
ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ನೇತೃತ್ವದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ನೇತೃತ್ವದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   

ಮೈಸೂರು: ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಕಾಯಂಗೊಳಿಸಬೇಕು, ಪೌರ ಕಾರ್ಮಿಕರಿಲ್ಲದ ಗ್ರಾಮ ಪಂಚಾಯಿತಿಗಳಲ್ಲಿ ಕೂಡಲೇ ಅವರನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ಇಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೇರಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ರಾಜ್ಯದ ಸುಮಾರು 6,220 ಗ್ರಾಮ ಪಂಚಾಯಿತಿಗಳಲ್ಲಿ ದುಡಿಯುತ್ತಿರುವ ಪೌರ ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ. ಸುಮಾರು 6 ಸಾವಿರಕ್ಕೂ ಅಧಿಕ ಮಂದಿ ಪೌರಕಾರ್ಮಿಕರು ಕೊಟ್ಟಷ್ಟು ಕೂಲಿ ಪಡೆದು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅವರು ಅಳಲು ತೋಡಿಕೊಂಡರು.

ADVERTISEMENT

ಗ್ರಾಮ ಪಂಚಾಯಿತಿ ಸ್ವಚ್ಛತಾ ಕಾರ್ಯಕ್ಕೆ ಆಧುನಿಕ ಯಂತ್ರೋಪಕರಣಗಳನ್ನು ಬಳಕೆ ಮಾಡಬೇಕು, ಕರ್ತವ್ಯದಲ್ಲಿ ಮೃತಪಟ್ಟ ಪೌರಕಾರ್ಮಿಕರ ಕುಟುಂಬದವರಿಗೆ ₹ 10 ಲಕ್ಷ ಪರಿಹಾರ ಹಾಗೂ ಅವರ ಕುಟುಂಬದ ಒಬ್ಬರಿಗೆ ಉದ್ಯೋಗ ನೀಡಬೇಕು, ಪೌರಕಾರ್ಮಿಕರಿಗೆ ವಾಸ ಮನೆಗಳನ್ನು ನಿರ್ಮಿಸಿಕೊಡಬೇಕು ಎಂದು ಅವರು ಆಗ್ರಹಿಸಿದರು.

ಜಿಲ್ಲಾ ಸಮಿತಿ ಪದಾಧಿಕಾರಿಗಳಾದ ಪುಟ್ಟಲಕ್ಷ್ಮಮ್ಮ, ಕಾರ್ಯ ಬಸವಣ್ಣ, ದೊಡ್ಡಸಿದ್ದು ಹಾದನೂರು, ಸೋಮಣ್ಣ ಬನ್ನಹಳ್ಳಿ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.