ADVERTISEMENT

ಅಧಿಕಾರಿಗಳ ನಿರ್ಲಕ್ಷ್ಯ: ನಿವಾಸಿಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 0:52 IST
Last Updated 2 ಅಕ್ಟೋಬರ್ 2020, 0:52 IST
ಸ್ಮಶಾನ ಒತ್ತುವರಿ ತೆರವಿಗೆ ಆಗ್ರಹಿಸಿ ಸಮತಾ ಸೈನಿಕ ದಳದ ವತಿಯಿಂದ ಪ್ರತಿಭಟನೆ ನಡೆಸಲಾಯಿತು
ಸ್ಮಶಾನ ಒತ್ತುವರಿ ತೆರವಿಗೆ ಆಗ್ರಹಿಸಿ ಸಮತಾ ಸೈನಿಕ ದಳದ ವತಿಯಿಂದ ಪ್ರತಿಭಟನೆ ನಡೆಸಲಾಯಿತು   

ಮೈಸೂರು: ಸ್ಮಶಾನ ಒತ್ತುವರಿ ತೆರವುಗೊಳಿಸಬೇಕು ಮತ್ತು ಮನೆಗಳಿಗೆ ಹಕ್ಕುಪತ್ರ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ಶ್ರೀರಾಂಪುರ ಗ್ರಾಮದ ಪರಿಶಿಷ್ಟ ಜಾತಿ ಕುಟುಂಬಗಳ ಸದಸ್ಯರು ಸಮತಾ ಸೈನಿಕ ದಳದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.

ಗ್ರಾಮದ 4 ಎಕರೆಯಷ್ಟು ಸ್ಮಶಾನ ಜಾಗದಲ್ಲಿ 1 ಎಕರೆ 13 ಗುಂಟೆ ಜಾಗವನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ. ಒತ್ತುವರಿ ತೆರವು ಮಾಡಬೇಕು ಎಂದು ಜಿಲ್ಲಾಧಿಕಾರಿಗೆ ಮನವಿ ಮಾಡಿದರು.

ಕೆ.ಆರ್‌.ನಗರ ತಾಲ್ಲೂಕಿನ ಕೆಲವು ಭ್ರಷ್ಟ ಅಧಿಕಾರಿಗಳು ಭೂಗಳ್ಳರಿಗೆ ಒತ್ತುವರಿ ಮಾಡಲು ನೆರವಾಗಿದ್ದಾರೆ. ನಮ್ಮ ಬೇಡಿಕೆಗಳನ್ನು ಈಡೇರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದರು.

ADVERTISEMENT

ಎರಡು ವರ್ಷಗಳ ಹಿಂದೆ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಗ್ರಾಮದ ಕಡುಬಡವವರು ಅಕ್ರಮ–ಸಕ್ರಮ ಅರ್ಜಿ ನೀಡಿದ್ದರು. ಆದರೆ ಇದುವರೆಗೂ ಯಾವುದೇ ಅಧಿಕಾರಿಗಳು ಬಂದು ಸಕ್ರಮ ಮಾಡಿ ಹಕ್ಕುಪತ್ರ ನೀಡಿಲ್ಲ ಎಂದು ದೂರಿದರು.

ಸಮತಾ ಸೈನಿಕ ದಳದ ಜಿಲ್ಲಾಧ್ಯಕ್ಷ ವಿ.ಗಣೇಶ್, ಉಪಾಧ್ಯಕ್ಷ ರಾಜು, ಕಾರ್ಯಾಧ್ಯಕ್ಷ ಸೆಂದಿಲ್‌ ಕುಮಾರ್, ಪ್ರಧಾನ ಕಾರ್ಯದರ್ಶಿ ಪ್ರವೀಣ್‌ ಕುಮಾರ್‌ ಹಾಗೂ ಪದಾಧಿಕಾರಿಗಳು, ಗ್ರಾಮದ ನಿವಾಸಿಗಳು ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.