ಮೈಸೂರು: ಬೆಂಗಳೂರಿನ ಮಾಗಡಿ ರಸ್ತೆಯ ಟೋಲ್ಗೇಟ್ ಬಳಿ ಇದ್ದ ನಟ ವಿಷ್ಣುವರ್ಧನ್ ಅವರ ಪ್ರತಿಮೆ ಧ್ವಂಸ ಖಂಡಿಸಿ ಇಲ್ಲಿನ ಜಗನ್ಮೋಹನ ಅರಮನೆ ಮುಂದೆ ಡಾ.ವಿಷ್ಣುವರ್ಧನ್ ಅಭಿಮಾನಿ ಬಳಗದ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.
ಬಳಗದ ಅಧ್ಯಕ್ಷ ಎಂ.ಡಿ.ಪಾರ್ಥಸಾರಥಿ ಮಾತನಾಡಿ, ‘ವಿಷ್ಣುವರ್ಧನ್ ಅವರು ಬದುಕಿದ್ದಾಗಲೂ ಅವರ ಏಳಿಗೆ ಸಹಿಸದೇ ತೊಂದರೆ ಕೊಡುತ್ತಿದ್ದರು. ಈಗ ನಿಧನರಾದ ಬಳಿಕವೂ ಅವರ ಪ್ರತಿಮೆ ಧ್ವಂಸಗೊಳಿಸುವ ಮೂಲಕ ವಿಕೃತಿ ಮೆರೆಯುತ್ತಿದ್ದಾರೆ’ ಎಂದು ಕಿಡಿಕಾರಿದರು.
ಪ್ರತಿಮೆ ಇದ್ದ ಸ್ಥಳದಲ್ಲಿ ತಕರಾರು ಇದ್ದಿದ್ದರೆ ಅದನ್ನು ಸೌಹಾರ್ದಯುತವಾಗಿ ಬಗೆಹರಿಸಬೇಕಿತ್ತು. ಅದನ್ನು ಬಿಟ್ಟು ಇಡೀ ಪ್ರತಿಮೆಯನ್ನು ಒಡೆದು ಹಾಕಿರುವುದು ಸರಿಯಲ್ಲ. ಈ ಕುರಿತು ನ್ಯಾಯಯುತವಾದ ತನಿಖೆ ನಡೆಯಬೇಕು. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಬಳಗದ ಮುಖಂಡರಾದ ಅಜಯ್ ಶಾಸ್ತ್ರಿ, ಗುರುರಾಜ್ ಶೆಣೈ, ಲೋಹಿತ್, ಹರೀಶ್ ನಾಯ್ಡು, ಬಸಪ್ಪ, ಅರುಣ್, ಸುಭಾಷ್, ಧನರಾಜ್, ಸಂತೋಷ್, ಬಸವರಾಜು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.