ADVERTISEMENT

ನಂಜನಗೂಡು: ಅತಿಕ್ರಮಣ ತೆರವಿಗೆ ಒತ್ತಾಯಿಸಿ ಪ್ರತಿಭಟನೆ

ಶಿರಮಳ್ಳಿ: ದೇವಾಲಯದ ಜಾಗ ಅತಿಕ್ರಮಣ: ಆರೋಪ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2020, 6:23 IST
Last Updated 9 ಅಕ್ಟೋಬರ್ 2020, 6:23 IST
ನಂಜನಗೂಡು ತಾಲ್ಲೂಕಿನ ಶಿರಮಳ್ಳಿ ಗ್ರಾಮದಲ್ಲಿ ದೇವಾಲಯಕ್ಕೆ ಸೇರಿದ ಜಾಗದ ಒತ್ತುವರಿಯಾಗಿದ್ದು ತೆರವುಗೊಳಿಸುವಂತೆ ಒತ್ತಾಯಿಸಿ ಗ್ರಾಮಸ್ಥರು, ರೈತ ಸಂಘದ ಕಾರ್ಯಕರ್ತರು ಗುರುವಾರ ತಾಲ್ಲೂಕು ಪಂಚಾಯಿತಿ ಕಚೇರಿ ಮುಂದೆ ಧರಣಿ ನಡೆಸಿದರು
ನಂಜನಗೂಡು ತಾಲ್ಲೂಕಿನ ಶಿರಮಳ್ಳಿ ಗ್ರಾಮದಲ್ಲಿ ದೇವಾಲಯಕ್ಕೆ ಸೇರಿದ ಜಾಗದ ಒತ್ತುವರಿಯಾಗಿದ್ದು ತೆರವುಗೊಳಿಸುವಂತೆ ಒತ್ತಾಯಿಸಿ ಗ್ರಾಮಸ್ಥರು, ರೈತ ಸಂಘದ ಕಾರ್ಯಕರ್ತರು ಗುರುವಾರ ತಾಲ್ಲೂಕು ಪಂಚಾಯಿತಿ ಕಚೇರಿ ಮುಂದೆ ಧರಣಿ ನಡೆಸಿದರು   

ನಂಜನಗೂಡು: ತಾಲ್ಲೂಕಿನ ಶಿರಮಳ್ಳಿ ಗ್ರಾಮದಲ್ಲಿ ದೇವಾಲಯಕ್ಕೆ ಸೇರಿದ ಜಾಗವನ್ನು ವ್ಯಕ್ತಿಯೊಬ್ಬರು ಒತ್ತುವರಿ ಮಾಡಿಕೊಂಡು ಶೌಚಾಲಯ ನಿರ್ಮಿಸಿರುವುದನ್ನು ತಕ್ಷಣ ತೆರವುಗೊಳಿಸುವಂತೆ ಒತ್ತಾಯಿಸಿ ತಾಲ್ಲೂಕು ರೈತ ಸಂಘದ ಕಾರ್ಯಕರ್ತರು ಗುರುವಾರ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸಿದರು.

ತಾ.ಪಂ. ಇಒ ಕಚೇರಿ ಪ್ರವೇಶ ದ್ವಾರದಲ್ಲಿ ಧರಣಿ ಆರಂಭಿಸಿದ ಪ್ರತಿಭಟನಕಾರರು ಒತ್ತುವರಿ ತೆರವುಗೊಳಿಸುವಂತೆ ಒತ್ತಾಯಿಸಿ ಘೋಷಣೆ ಕೂಗಿದರು.

ತಾಲ್ಲೂಕು ರೈತ ಸಂಘದ ಅಧ್ಯಕ್ಷ ಶಿರಮಳ್ಳಿ ಸಿದ್ದಪ್ಪ ಮಾತನಾಡಿ, ‘ಗ್ರಾಮದ ಬಸವೇಶ್ವರ ದೇವಾಲಯಕ್ಕೆ ಸೇರಿದ ಜಾಗವನ್ನು ವ್ಯಕ್ತಿಯೊಬ್ಬರು ಒತ್ತುವರಿ ಮಾಡಿಕೊಂಡು ಸ್ನಾನದ ಮನೆ, ಶೌಚಗೃಹ ಹಾಗೂ ಸಂಪ್ ನಿರ್ಮಿಸಿಕೊಂಡಿದ್ದು, ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿ ವೇಳೆ ಚರಂಡಿ ನಿರ್ಮಾಣಕ್ಕೆ ತಡೆಯೊಡ್ಡಿದ್ದಾರೆ’ ಎಂದು ಆರೋಪಿಸಿದ್ದಾರೆ.

ADVERTISEMENT

‘6 ತಿಂಗಳ ಹಿಂದೆ ಗ್ರಾಮಸ್ಥರು ಹೋರಾಟ ನಡೆಸಿ ಒತ್ತುವರಿ ತೆರವುಗೊಳಿಸಿ ಚರಂಡಿ ನಿರ್ಮಾಣ ಕಾಮಗಾರಿ ಮುಂದುವರೆಸುವಂತೆ ಮನವಿ ಮಾಡಿದ್ದೇವು. ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ಪೊಲೀಸರ ಸಮ್ಮುಖದಲ್ಲಿ ಎರಡು ತಿಂಗಳ ಹಿಂದೆ ಶಾಂತಿ ಸಭೆ ನಡೆಸಿ ಒತ್ತುವರಿ ತೆರವುಗೊಳಿಸುವ ಭರವಸೆ ನೀಡಿದ್ದರು. ಆದರೆ, ಈವರೆಗೂ ಒತ್ತುವರಿ ತೆರವುಗೊಳಿಸಿಲ್ಲ, ಇದರಿಂದ ಗ್ರಾಮದಲ್ಲಿ ಅಶಾಂತಿ ವಾತಾವರಣ ಸೃಷ್ಟಿಯಾಗುತ್ತಿದೆ, ತಕ್ಷಣ ಅಧಿಕಾರಿಗಳು ಒತ್ತುವರಿ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಹೆಜ್ಜಿಗೆ ಪ್ರಕಾಶ್, ಗುರುಸ್ವಾಮಿ, ಬಸಪ್ಪ, ಮಾದಶೆಟ್ಟಿ, ಮಂಜುನಾಥ್, ಮಹದೇವಸ್ವಾಮಿ, ರಾಜು, ಸಿದ್ಧರಾಜು, ಬೀರೇಗೌಡ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.