ಮೈಸೂರು: ಎಲ್ಲ ಸರ್ಕಾರಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ಟಾಪ್ ವಿತರಿಸಬೇಕು ಎಂದು ಆಗ್ರಹಿಸಿ ಮಹಾರಾಣಿ ಮಹಿಳಾ ಕಲಾ ಕಾಲೇಜಿನ ವಿದ್ಯಾರ್ಥಿನಿಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಶನಿವಾರ ಪ್ರತಿಭಟನೆ ನಡೆಸಿದರು.
ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ ನೇತೃತ್ವದಲ್ಲಿ ಸೇರಿದ ನೂರಕ್ಕೂ ಅಧಿಕ ವಿದ್ಯಾರ್ಥಿನಿಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಪದವಿಯ ದ್ವಿತೀಯ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿನಿಯರಿಗೆ ಲ್ಯಾಪ್ಟಾಪ್ ನೀಡಬೇಕು. ಕೇವಲ ಪ್ರಥಮ ವರ್ಷದವರಿಗೆ ಲ್ಯಾಪ್ಟಾಪ್ ನೀಡುವುದು ಸರಿಯಲ್ಲ ಎಂದು ಖಂಡಿಸಿದರು.
ದ್ವಿತೀಯ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿನಿಯರು ಮಾಡಿದ ತಪ್ಪಾದರೂ ಏನು ಎಂದು ಪ್ರಶ್ನಿಸಿದ ಅವರು, ನೀಡುವುದಾದರೆ ಎಲ್ಲ ವರ್ಷದ ಪದವಿ ವಿದ್ಯಾರ್ಥಿಗಳಿಗೆ ನೀಡಬೇಕು ಎಂದು ಆಗ್ರಹಿಸಿದರು.
ಸರ್ಕಾರ ಕೂಡಲೇ ತಾರತಮ್ಯ ನೀತಿಯನ್ನು ಬದಿಗಿಟ್ಟು ಎಲ್ಲ ವಿದ್ಯಾರ್ಥಿಗಳನ್ನು ಸಮಾನ ಮಾನೋಭಾವದಿಂದ ಕಾಣಲಿ ಎಂದು ಒತ್ತಾಯಿಸಿದರು.
ವಿದ್ಯಾರ್ಥಿ ಕಾರ್ಯದರ್ಶಿ ಸಿ.ಪದ್ಮಾ, ವಿದ್ಯಾರ್ಥಿನಿಯರಾದ ಜಿ.ಲಕ್ಷ್ಮೀ, ಎಸ್.ಪಲ್ಲವಿ, ಎ.ಎಸ್.ಅಂಬಿಕಾ ಹಾಗೂ ಇತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.