ಮೈಸೂರು: ಗ್ರೀನ್ ಬಡ್ಸ್ ಆಗ್ರೊ ಕಂಪನಿಯಲ್ಲಿ ಠೇವಣಿ ಇರಿಸಿದ್ದ ಹಣವನ್ನು ಮರಳಿಸುವಂತೆ ಒತ್ತಾಯಿಸಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಠೇವಣಿದಾರರು ಪ್ರತಿಭಟನೆ ನಡೆಸುತ್ತಿದ್ದು, ಬಳ್ಳಾರಿ ಜಿಲ್ಲೆಯ ಕೂಡ್ಲಿಗಿಯ ಪೀರ್ ಸಾಬ್ ಎಂಬುವವರು ಮಂಗಳವಾರ ಕ್ರಿಮಿನಾಶಕ ಸೇವಿಸಲು ಯತ್ನಿಸಿದರು.
ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಕ್ರಿಮಿನಾಶಕದ ಬಾಟಲಿಯನ್ನು ಕಿತ್ತುಕೊಂಡರು. ಆದರೆ, ಅಷ್ಟೊತ್ತಿಗೆ ಅವರ ಮೈಮೇಲೆ ಕ್ರಿಮಿನಾಶಕವು ಚೆಲ್ಲಿತ್ತು. ಕೂಡಲೇ ಇವರನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಿ, ಪರೀಕ್ಷೆಗೆ ಒಳಪಡಿಸಲಾಯಿತು. ಅವರು ಅಪಾಯದಿಂದ ಪಾರಾಗಿದ್ದಾರೆ.
ನಂತರ, ಪ್ರತಿಭಟನನಿರತ ಮಹಿಳೆಯರು ರಸ್ತೆಯಲ್ಲಿ ಉರುಳುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಗ್ರೀನ್ ಬಡ್ಸ್ ಕಾರ್ಯಕರ್ತರು ಹಾಗೂ ಠೇವಣಿದಾರರ ರಕ್ಷಣಾ ಸಮಿತಿ ನೇತೃತ್ವದಲ್ಲಿ ಸೋಮವಾರದಿಂದ ಆರಂಭವಾಗಿರುವ ಪ್ರತಿಭಟನೆಗೆ ರಾಜ್ಯ ಕಬ್ಬು ಬೆಳೆಗಾರರ ಸಂಘ ಬೆಂಬಲ ನೀಡಿದೆ. ಜಿಲ್ಲಾಧಿಕಾರಿ ಕಚೇರಿ ಮುಂದೆಯೇ ಅಡುಗೆ ತಯಾರಿಸಿಕೊಂಡು ಅಹೋರಾತ್ರಿ ಧರಣಿ ನಡೆಸಲಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.