ADVERTISEMENT

ಆಸ್ಪತ್ರೆ ಎದುರು ಶವವಿಟ್ಟು ಪ್ರತಿಭಟನೆ: ಜೈನ್ ಸಮಾಜದವರ ಆಕ್ರೋಶ

ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2021, 4:55 IST
Last Updated 19 ಫೆಬ್ರುವರಿ 2021, 4:55 IST
ಹುಣಸೂರು ನಗರದ ಸಾರ್ವಜನಿಕ ಆಸ್ಪತ್ರೆ ಎದುರು ಗುರುವಾರ ಜೈನ್ ಸಮುದಾಯದವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ರಾಹುಲ್ ಜೈನ್ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಎಂದು ಒತ್ತಾಯಿಸಿ ಶವವಿಟ್ಟು ಪ್ರತಿಭಟನೆ ನಡೆಸಿದರು
ಹುಣಸೂರು ನಗರದ ಸಾರ್ವಜನಿಕ ಆಸ್ಪತ್ರೆ ಎದುರು ಗುರುವಾರ ಜೈನ್ ಸಮುದಾಯದವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ರಾಹುಲ್ ಜೈನ್ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಎಂದು ಒತ್ತಾಯಿಸಿ ಶವವಿಟ್ಟು ಪ್ರತಿಭಟನೆ ನಡೆಸಿದರು   

ಹುಣಸೂರು: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊಟ್ಟೆನೋವು ಎಂದು ಮಂಗಳವಾರ ರಾತ್ರಿ ಚಿಕಿತ್ಸೆ ಪಡೆದ ರೋಗಿ ರಾಹುಲ್ ಜೈನ್ ಬುಧವಾರ ಬೆಳಿಗ್ಗೆ ಎದ್ದೇಳದೆ ಸಾವನ್ನಪ್ಪಿದ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಜೈನ್ ಸಮುದಾಯದವರು ಗುರುವಾರ ಆಸ್ಪತ್ರೆ ಎದುರು ಶವವಿಟ್ಟು ಪ್ರತಿಭಟಿಸಿದರು.

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಮಂಜುನಾಥ್ ಆಕ್ರೋಶಗೊಂಡ ಸಮುದಾಯದ ಮುಖಂಡರು ಮತ್ತು ನಗರಸಭೆ ಕೆಲವು ಸದಸ್ಯರೊಂದಿಗೆ ಚರ್ಚಿಸಿ ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಕಾನೂನು ರೀತಿ ಕ್ರಮ ತೆಗೆದುಕೊಳ್ಳಲು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

ನೊಂದ ಕುಟುಂಬದವರು ಮತ್ತು ಸ್ಥಳೀಯರು ಪ್ರತಿಭಟನೆ ಹಿಂಪಡೆದು ಶವಸಂಸ್ಕಾರಕ್ಕೆ ತೆರಳಿದರು.

ADVERTISEMENT

ಶಾಸಕರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅಮರನಾಥ್, ಉಪವಿಭಾಗಾಧಿಕಾರಿ ವೀಣಾ, ತಹಶೀಲ್ದಾರ್ ಬಸವರಾಜ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕೀರ್ತಿಕುಮಾರ್ ಮತ್ತು ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಸರ್ವೇಶ್ ರಾಜೇ ಅರಸು ಭಾಗವಹಿಸಿದ್ದರು.

‘ಯುವಕನ ನಿಗೂಢ ಸಾವಿನ ಬಗ್ಗೆ ಚರ್ಚಿಸಿದ ಸಭೆ, ಹೊಟ್ಟೆ ನೋವಿಗೆ ವೈದ್ಯರು ನೀಡಿರುವ ಔಷಧಿ ಪ್ರಾಣ ತೆಗೆಯುವಂತಹದ್ದಲ್ಲ, ಲಕ್ಷಕ್ಕೆ ಒಬ್ಬರಿಗೆ ಈ ಔಷಧಿ ವ್ಯತಿರಿಕ್ತ ಪರಿಣಾಮ ಬೀರಿ ಪ್ರಾಣ ಹಾನಿ ಆಗುವ ಸಾಧ್ಯತೆ ಇದೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅಮರನಾಥ್ ಹೇಳಿದರು.

‘ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಯಾವ ಕಾರಣದಿಂದ ಯುವಕ ಸಾವನ್ನಪ್ಪಿದ್ದಾನೆ ಎಂದು ತಿಳಿಯಲಿದ್ದು, ಆ ಬಳಿಕ ವೈದ್ಯರ ಮೇಲೆ ಕಾನೂನಾತ್ಮಕ ಹೋರಾಟ ನಡೆಸಿ ನೊಂದ ಕುಟುಂಬಕ್ಕೆ ನ್ಯಾಯ ಕೊಡಿಸುವ ಪ್ರಯತ್ನ ಮಾಡುವ ಭರವಸೆ’ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.