ರಾಹುಲ್ ಗಾಂಧಿ, ಶಿವಕುಮಾರ್
ಮೈಸೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮಿಳುನಾಡು ಪ್ರವಾಸ ಮುಗಿಸಿ ದೆಹಲಿಗೆ ವಾಪಸ್ ಆಗುವ ಮಾರ್ಗ ಮಧ್ಯೆ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಒಂದೆರಡು ನಿಮಿಷ ಪ್ರತ್ಯೇಕ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.
ಸಂಜೆ 5.15ರ ಸುಮಾರಿಗೆ ತಮಿಳುನಾಡಿನ ಗೂಡ್ಲೂರಿನಿಂದ ಹೆಲಿಕಾಪ್ಟರ್ ಮೂಲಕ ವಿಮಾನ ನಿಲ್ದಾಣಕ್ಕೆ ವಾಪಸಾದ ರಾಹುಲ್ ಅವರನ್ನು ಸಿದ್ದರಾಮಯ್ಯ, ಶಿವಕುಮಾರ್ ಭೇಟಿಯಾದರು. ಈ ವೇಳೆ ವಿಮಾನದ ಬಳಿಯೇ ಇಬ್ಬರೊಂದಿಗೂ ರಾಹುಲ್ ಪ್ರತ್ಯೇಕವಾಗಿ ಚುಟುಕು ಮಾತುಕತೆ ನಡೆಸಿದರು.
ಸ್ವಾಗತ: ಮಧ್ಯಾಹ್ನ 2 ಗಂಟೆ ಸುಮಾರಿಗೆ ಇಲ್ಲಿನ ಮಂಡಕಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಗಾಂಧಿಯವರನ್ನು ಸಿಎಂ, ಡಿಸಿಎಂ ಸ್ವಾಗತಿಸಿದರು.
ಪುಷ್ಪಗುಚ್ಛದೊಂದಿಗೆ ಸ್ವಾಗತಿಸಿದ ಸಿಎಂ, ರಾಹುಲ್ ಗಾಂಧಿ ಅವರಿಗೆ ಮೈಸೂರು ಅರಮನೆ ಮಾದರಿಯನ್ನು ಉಡುಗೊರೆಯಾಗಿ ನೀಡಿದರು. ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ಕೆ.ಜೆ. ಜಾರ್ಜ್, ಕೆ. ವೆಂಕಟೇಶ್ ಜೊತೆಗಿದ್ದರು.
ಬಳಿಕ ರಾಹುಲ್ ಗಾಂಧಿ ಹೆಲಿಕಾಪ್ಟರ್ ಮೂಲಕ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಗೂಡ್ಲೂರಿಗೆ ತೆರಳಿದರು. ಸಂಜೆ ಅದೇ ಹೆಲಿಕಾಪ್ಟರ್ನಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ವಾಪಸಾಗಿ ದೆಹಲಿಗೆ ಪ್ರಯಾಣ ಬೆಳೆಸಿದರು.
ಮಧ್ಯಾಹ್ನ ಒಂದೇ ವಿಮಾನದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ಬೆಂಗಳೂರಿನಿಂದ ಮೈಸೂರಿಗೆ ಬಂದಿಳಿದರು. ರಾಹುಲ್ ಭೇಟಿ ಬಳಿಕ ಸಿ.ಎಂ. ತಮ್ಮ ನಿವಾಸಕ್ಕೆ ತೆರಳಿದರೆ, ಡಿಸಿಎಂ ಹೋಟೆಲ್ನಲ್ಲಿ ವಿಶ್ರಾಂತಿ ಪಡೆದರು. ಸಂಜೆ ರಾಹುಲ್ರನ್ನು ಬೀಳ್ಕೊಟ್ಟ ಬಳಿಕ ಒಂದೇ ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ ಆದರು.
‘ರಾಹುಲ್ ಗಾಂಧಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಬಂದಿದ್ದು, ಅವರನ್ನು ನಾವೆಲ್ಲ ಒಟ್ಟಾಗಿ ಭೇಟಿಯಾಗಿದ್ದೇವೆ. ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ’ ಎಂದು ಸಿದ್ದರಾಮಯ್ಯ ಪತ್ರಕರ್ತರಿಗೆ ತಿಳಿಸಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.