ಮೈಸೂರು: ಸಾಂಸ್ಕೃತಿಕ ರಾಜ ಧಾನಿ ಮೈಸೂರಿನಲ್ಲಿ ವರನಟ ಡಾ.ರಾಜ ಕುಮಾರ್ ಅವರ 91ನೇ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿವಿಧ ಸಂಘ ಸಂಸ್ಥೆಗಳು ರಾಜಕುಮಾರ್ ಅವರನ್ನು ನೆನೆದು ಗೌರವ ಸಲ್ಲಿಸಿದವು.
ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಜಯಚಾಮರಾಜೇಂದ್ರ ವೃತ್ತದ ಡಾ.ರಾಜಕುಮಾರ್ ಉದ್ಯಾ ನದಲ್ಲಿ ಜನ್ಮದಿನ ಆಚರಿಸಲಾಯಿತು.
ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಅವರು ಡಾ.ರಾಜಕುಮಾರ್ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಜ್ಯೋತಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಶಿಲ್ಪಾನಾಗ್, ಪೊಲೀಸ್ ಕಮೀಷನರ್ ಕೆ.ಟಿ.ಬಾಲಕೃಷ್ಣ, ಎಎಸ್ಪಿ ಸ್ನೇಹಾ ಭಾಗವಹಿಸಿ ನಮನ ಸಲ್ಲಿಸಿದರು. ಬಳಿಕ ಸಾರ್ವಜನಿಕರಿಗೆ ಸಿಹಿ ವಿತರಣೆ ಮಾಡಲಾಯಿತು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕಾಂತರಾಜು, ಮೈಸೂರು ಮಹಾನಗರಪಾಲಿಕೆ ಉಪ ಆಯುಕ್ತರಾದ ಕುಸುಮಾ ಕುಮಾರಿ, ಕಾರ್ಯಪಾಲಕ ಎಂಜಿನಿಯರ್ ನಾಗರಾಜು, ಅಭಿವೃದ್ಧಿ ಅಧಿಕಾರಿ ಎಂ.ಸಿ.ಶ್ರೀನಿವಾಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಚೆನ್ನಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಆರ್.ರಾಜು ಭಾಗವಹಿಸಿದ್ದರು.
ಗೌರವ ಸಲ್ಲಿಸಿದ ಯದುವೀರ: ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಡಾ.ರಾಜ್ ಅವರಿಗೆ ಜನ್ಮದಿನದ ಶುಭಕೋರಿದ್ದಾರೆ.
ಡಾ.ರಾಜ್ ಅವರಿಗೆ ಅಂದಿನ ಮಹಾರಾಜ ಚಾಮರಾಜ ಒಡೆಯರ್ ಅವರು ಸನ್ಮಾನಿಸಿರುವ ಛಾಯಾಚಿತ್ರವನ್ನು ಲಗತ್ತಿಸಿದ್ದಾರೆ. ರಾಜಕುಮಾರ ಅವರನ್ನು ‘ನಟ ಚಕ್ರವರ್ತಿ’ ಎಂದು ಕರೆದು ಗೌರವಿಸಿದ್ದಾರೆ.
ಅಭಿಮಾನಿಗಳ ಸಡಗರ: ಚಾಮರಾಜ ಜೋಡಿ ರಸ್ತೆಯಲ್ಲಿರುವ ಡಾ.ರಾಜ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಅಭಿಮಾನಿಗಳು ಸಿಹಿ ವಿತರಿಸಿ ಸಂಭ್ರಮಿಸಿದರು. ಹೋಟೆಲ್ ಮಾಲೀಕರ ಸಂಘದ ವತಿಯಿಂದ ಡಾ.ರಾಜ್ಕುಮಾರ್ ಉದ್ಯಾನದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.