ಮೈಸೂರು: ‘ಗಣರಾಜ್ಯೋತ್ಸವದ ಪ್ರಯುಕ್ತ ಜಿಲ್ಲೆಯ 44 ಕೆರೆಗಳ ಅಂಗಳದಲ್ಲಿ ತ್ರಿವರ್ಣ ಧ್ವಜಾರೋಹಣಕ್ಕೆ ಜಿಲ್ಲಾ ಪಂಚಾಯಿತಿಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್.ಪೂರ್ಣಿಮಾ ತಿಳಿಸಿದ್ದಾರೆ.
‘ಜಿಲ್ಲೆಯ 21 ಕೆರೆಗಳ ಬಳಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ತ್ರಿವರ್ಣ ಧ್ವಜ ಹಾರಿಸಲಾಗಿತ್ತು. ಈಗ ಅದೇ ಮಾದರಿಯಲ್ಲಿ 44 ಕೆರೆಗಳಲ್ಲೂ ಗಣರಾಜ್ಯೋತ್ಸವ ಆಚರಿಸಲಾಗುವುದು. ಆ ಮೂಲಕ ಜಲ ಸಂರಕ್ಷಣೆ ನಮ್ಮ ಧ್ಯೇಯ ಎಂಬ ಸಂದೇಶ ಸಾರಲಾಗುವುದು’ ಎಂದು ಹೇಳಿದ್ದಾರೆ.
‘ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ವಿಭಿನ್ನ ಹಾಗೂ ವಿಶೇಷವಾಗಿ ಆಚರಿಸಲು ಗ್ರಾಮೀಣಾಭಿವೃದ್ಧಿ ಇಲಾಖೆ ನೀಡಿದ್ದ ಸೂಚನೆಯಂತೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಬರುವ 21 ಕೆರೆಗಳನ್ನು ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಿ, ಹೂಳೆತ್ತಿ ಅಂತರ್ಜಲ ಹೆಚ್ಚಿಸುವ ಪ್ರಯತ್ನವನ್ನು ಯಶಸ್ವಿಯಾಗಿ ಮಾಡಲಾಗಿತ್ತು’ ಎಂದಿದ್ದಾರೆ.
‘ಅಂತರ್ಜಲ ಉಳಿಸುವ ಅಭಿಯಾನದಡಿ ನರೇಗಾದ ನೆರವಿನೊಂದಿಗೆ ಪರಿಪೂರ್ಣ ಅಭಿವೃದ್ಧಿಗೊಂಡಿರುವ 33 ಕೆರೆಗಳು ಹಾಗೂ ಶೇ.50ರಷ್ಟು ಅಭಿವೃದ್ಧಿಗೊಂಡಿರುವ 11 ಕೆರೆಗಳಲ್ಲೂ ಗಣರಾಜ್ಯೋತ್ಸವ ಆಚರಣೆಗೆ ಕ್ರಮ ವಹಿಸಲಾಗಿದೆ’ ಎಂದು ಹೇಳಿದ್ದಾರೆ.
‘ಈ ಕೆರೆಗಳ ಅಂಗಳದಲ್ಲಿ ಸ್ಥಳೀಯ ಪ್ರೌಢಶಾಲಾ ಮಕ್ಕಳಿಗೆ ಕೆರೆಯ ಮಹತ್ವದ ಕುರಿತು ಚಿತ್ರಕಲೆ ಸ್ಪರ್ಧೆ, ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಅಲ್ಲದೇ ಸಸಿ ನೆಡುವುದು ಹಾಗೂ ಶ್ರಮ ದಾನ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.