ADVERTISEMENT

ಪಿಂಚಣಿ ಸೌಲಭ್ಯಕ್ಕೆ ಆಗ್ರಹಿಸಿ 10 ರಿಂದ ಧರಣಿ

​ಪ್ರಜಾವಾಣಿ ವಾರ್ತೆ
Published 8 ಜನವರಿ 2020, 16:03 IST
Last Updated 8 ಜನವರಿ 2020, 16:03 IST
ಬಾಲು ಎಸ್‌.ರಂಗಸ್ವಾಮಿ
ಬಾಲು ಎಸ್‌.ರಂಗಸ್ವಾಮಿ   

ಮೈಸೂರು: ಅನುದಾನಿತ ಶಾಲಾ, ಕಾಲೇಜುಗಳ ನೌಕರರಿಗೂ ಪಿಂಚಣಿ ಸೌಲಭ್ಯ ನೀಡುವಂತೆ ಒತ್ತಾಯಿಸಿ ಪಿಂಚಣಿ ವಂಚಿತ ರಾಜ್ಯದ ನೌಕರರು ಜ. 10 ರಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದಾರೆ.

‍ಪಿಂಚಣಿ ವಿಚಾರದಲ್ಲಿ ಸರ್ಕಾರಿ ಶಾಲೆ ಮತ್ತು ಅನುದಾನಿತ ಶಾಲೆಗಳ ನಡುವೆ ತಾರತಮ್ಯ ಎಸಗಲಾಗಿದೆ. ಅನುದಾನಿತ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ 2006ರಿಂದ ಯಾವುದೇ ಪಿಂಚಣಿ ಸೌಲಭ್ಯ ಲಭಿಸಿಲ್ಲ. ನಿವೃತ್ತಿಯ ಬಳಿಕ ನೌಕರರ ಕುಟುಂಬ ಬೀದಿಗೆ ಬೀಳುವ ಪರಿಸ್ಥಿತಿಯಿದೆ ಎಂದು ರಾಜ್ಯ ಪಿಂಚಣಿ ವಂಚಿತ ನೌಕರರ ಸಂಘದ ಜಂಟಿ ಕಾರ್ಯದರ್ಶಿ ಬಾಲು ಎಸ್‌.ರಂಗಸ್ವಾಮಿ ತಿಳಿಸಿದರು.

‘ಸಮಾನ ಪಿಂಚಣಿಗೆ ಆಗ್ರಹಿಸಿ ಕೆಲ ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ. ಅಕ್ಟೋಬರ್‌ನಲ್ಲಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದಾಗ, ಆಗ ವಿರೋಧ ಪಕ್ಷದ ನಾಯಕರಾಗಿದ್ದ ಬಿ.ಎಸ್‌.ಯಡಿಯೂರಪ್ಪ ಬೆಂಬಲ ಸೂಚಿಸಿದ್ದರು. ಪಿಂಚಣಿ ಪ್ರತಿಯೊಬ್ಬ ನೌಕರನ ಮೂಲಭೂತ ಹಕ್ಕು ಎಂದಿದ್ದರು. ಇದೀಗ ಅವರು ರಾಜ್ಯದ ಮುಖ್ಯಮಂತ್ರಿ ಆಗಿದ್ದಾರೆ. ನಮ್ಮ ಬೇಡಿಕೆ ಈಡೇರಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

ರಾಜ್ಯದಾದ್ಯಂತ ಅನುದಾನಿತ ಶಾಲೆಗಳ 70 ಸಾವಿರ ನೌಕರರು ಪಿಂಚಣಿ ವಂಚಿತರಾಗಿದ್ದಾರೆ. ಧರಣಿಯಲ್ಲಿ 30 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.