ಮೈಸೂರು: ‘ಬೆಂಗಳೂರಿನ ರಾಜಕಾಲುವೆ, ಕೆರೆ ಹಾಗೂ ಬಫರ್ ವಲಯದ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಿರಂತರವಾಗಿ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿದ್ದು, ಪ್ರಭಾವಿಗಳನ್ನೂ ಬಿಡುವುದಿಲ್ಲ’ ಎಂದು ಕಂದಾಯ ಸಚಿವ ಆರ್.ಅಶೋಕಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಒತ್ತುವರಿ ತೆರವು ಮಾಡಿದರೂ ಮತ್ತೆ ಹೊಸ ಒತ್ತುವರಿ ಆಗುತ್ತಿದೆ. ಹಿಂದಿನ ಸರ್ಕಾರಗಳು ಕೆಲ ದಿನ ಮಾತ್ರ ಕಾರ್ಯಾಚರಣೆ ನಡೆಸುತ್ತಿದ್ದವು. ಆದರೆ, ಬಿಜೆಪಿ ಸರ್ಕಾರ ಕಠಿಣ ಕ್ರಮವಹಿಸಿದೆ. ಕಾರ್ಯಾಚರಣೆ ಸಂಬಂಧ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಿದ್ದು, ಕೇವಿಯಟ್ ಸಲ್ಲಿಸಲು ಅಡ್ವೊಕೇಟ್ ಜನರಲ್ ಜೊತೆಯೂ ಚರ್ಚಿಸಲಾಗಿದೆ’ ಎಂದರು.
‘ಮಳೆ ಹಾನಿ ಹೆಚ್ಚು ಸಂಭವಿಸಿರುವ ಎರಡು ವಲಯದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಬೆಂಗಳೂರಿನಾದ್ಯಂತ ಮುಂಬರುವ ದಿನಗಳಲ್ಲಿ ಕಾರ್ಯಾಚರಣೆ ನಡೆಸಿ ಬಡವರು, ಶ್ರೀಮಂತರು ಸೇರಿದಂತೆ ಯಾರೇ ಭೂಮಿ ಒತ್ತುವರಿ ಮಾಡಿದ್ದರೂ, ವಶಕ್ಕೆ ಪಡೆಯಲಿದೆ. ಬಡವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಸಲಾಗುವುದು’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.