ಕೆ.ಆರ್.ನಗರ: ಭತ್ತದ ಬೆಳೆಗೆ ಕೀಟಭಾದೆ, ಷೋಷಕಾಂಶಗಳ ಕೊರತೆ ಎದುರಾಗಿದ್ದು ರೈತರು ಸೂಕ್ತ ನಿರ್ವಹಣಾ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಕೆ.ಜೆ. ಮಲ್ಲಿಕಾರ್ಜುನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕು ವ್ಯಾಪ್ತಿಯಲ್ಲಿ ಭತ್ತ ಬಿತ್ತನೆ ಕಾರ್ಯ ಸಂಪೂರ್ಣವಾಗಿದೆ. ಈ ಬಾರಿ 20 ರಿಂದ 22 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ನಾಟಿ ಆಗಿರಬಹುದು ಎಂದು ಅಂದಾಜಿಸಲಾಗಿದೆ. ಬೆಳೆ ಪ್ರಾರಂಭಿಕ ಹಂತದಲ್ಲಿದ್ದು, ಬಹುತೇಕ ರೈತರು ಹೈಬ್ರಿಡ್ ಭತ್ತದ ತಳಿಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ.
ನಾಟಿ ಕಾರ್ಯಕ್ಕೆ ಬೇಕಾದ ಬಿತ್ತನೆ, ರಸಗೊಬ್ಬರ ಹಾಗೂ ಲಘು ಪೋಷಕಾಂಶಗಳ ಕೊರತೆ ಆಗದಂತೆ ಮುಂಜಾಗ್ರತಾ ಕ್ರಮ ವಹಿಸಿದ್ದರಿಂದ ನಾಟಿ ಕಾರ್ಯ ನಿರಾತಂಕವಾಗಿ ನಡೆದಿದೆ. ಭತ್ತದ ಬೆಳೆ ಪ್ರಾರಂಭಿಕ ಹಂತದಲ್ಲಿದ್ದು, ಬೆಳೆಗೆ ಕೆಲವು ಕೀಟಭಾದೆ ಹಾಗೂ ಷೋಷಕಾಂಶಗಳ ಕೊರತೆ ಎದುರಾಗಿದ್ದು, ರೈತರು ಈ ಬಗ್ಗೆ ಗಮನ ಹರಿಸಬೇಕು ಎಂದು ತಿಳಿಸಿದ್ದಾರೆ.
ಬೆಳೆಗಳಲ್ಲಿ ರೋಗ ಭಾದೆ ಕಂಡು ಬಂದಲ್ಲಿ ರೈತರು ನೇರವಾಗಿ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಿ ಪೀಡೆನಾಶಕಗಳನ್ನು ಬಳಸಬೇಕು. ಮೋಡ ಕವಿದ ವಾತಾವರಣ ಇದ್ದರೆ ಸಿಂಪಡಣೆ ಮಾಡಬಾರದು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.