ADVERTISEMENT

ನಂಜನಗೂಡು: ರಸ್ತೆ ಅಭಿವೃದ್ಧಿಗೆ ಒತ್ತಾಯಿಸಿ ಪ್ರತಿಭಟನೆ

ಬೇಡಿಕೆ ಈಡೇರದಿದ್ದರೆ ಪ್ರತಿಭಟನೆ ತೀವ್ರ ಮುಳ್ಳೂರು ಗ್ರಾಮಸ್ಥರ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2025, 4:01 IST
Last Updated 17 ನವೆಂಬರ್ 2025, 4:01 IST
ನಂಜನಗೂಡಿನ ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ತಾಲ್ಲೂಕಿನ ಮುಳ್ಳೂರು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು
ನಂಜನಗೂಡಿನ ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ತಾಲ್ಲೂಕಿನ ಮುಳ್ಳೂರು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು   

ನಂಜನಗೂಡು: ಗ್ರಾಮದ ಮುಖ್ಯ ರಸ್ತೆ ಸಂಪೂರ್ಣ ಹಾಳಾಗಿದ್ದು, ರಸ್ತೆ ಅಭಿವೃದ್ಧಿ ಪಡಿಸುವಂತೆ ಆಗ್ರಹಿಸಿ ತಾಲ್ಲೂಕಿನ ಮುಳ್ಳೂರು ಗ್ರಾಮಸ್ಥರು ನಗರದ ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. 

ಮುಳ್ಳುರು ಗ್ರಾಮದಿಂದ ನಗರಕ್ಕೆ ಪಾದಯಾತ್ರೆ ಮಾಡಿದ ನೂರಾರು ಮಂದಿ ಅಂಬೇಡ್ಕರ್ ವೃತ್ತದಲ್ಲಿ ಸಂಘಟಿತರಾಗಿ ಚುನಾಯಿತ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಅಂಬೇಡ್ಕರ್ ಯುವಕ ಸಂಘದ ಅಧ್ಯಕ್ಷ ಸಂದೇಶ್ ಮಾತನಾಡಿ, ಮುಳ್ಳೂರು ಗ್ರಾಮದ ಬೋಧಿವೃಕ್ಷ ವೃತ್ತದಿಂದ ತಿ.ನರಸೀಪುರ ಮುಖ್ಯ ರಸ್ತೆವರೆಗಿನ ಮಾರ್ಗ ಸಂಪೂರ್ಣ ಹಾಳಾಗಿದೆ. ಈ ರಸ್ತೆಯಲ್ಲಿ ಹೊರಳವಾಡಿ, ಕುಳ್ಳಂಕನಹುಂಡಿ ಹಾಗೂ ಮುಳ್ಳೂರು ಗ್ರಾಮಸ್ಥರು ನಿತ್ಯ ಸಂಚರಿಸುತ್ತಾರೆ. ವಾಹನ ಸವಾರರು ಅಪಘಾತಕ್ಕೀಡಾಗಿ ಗಾಯಗೊಂಡಿದ್ದಾರೆ. ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಳೆದ ಎರಡೂವರೆ ವರ್ಷಗಳಿಂದಲೂ ಶಾಸಕರ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ, ಚುನಾವಣೆಗೂ ಮುನ್ನ ಗ್ರಾಮದ ಅಭಿವೃದ್ಧಿ ಭರವಸೆ ನೀಡಿದ್ದ ಶಾಸಕರು ನಮ್ಮ ಗ್ರಾಮದ ಬಗ್ಗೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ರಸ್ತೆ ಅಭಿವೃದ್ಧಿಗೆ ಮುಂದಾಗಬೇಕು, ಇಲ್ಲವಾದಲ್ಲಿ ಚುನಾಯಿತ ಜನಪ್ರತಿನಿಧಿಗಳ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. 

ADVERTISEMENT

ಪ್ರತಿಭಟನೆಯಲ್ಲಿ ಮುಳ್ಳೂರು ಸಿದ್ದರಾಜು, ಬಸವರಾಜು, ಶಿವಕುಮಾರ್, ಶಿವಣ್ಣ, ಶರತ್, ಮಹೇಶ್, ಗಿರೀಶ್, ಶಂಕರಪುರ ಮಹದೇವಸ್ವಾಮಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.