ಮೈಸೂರು: ‘ಕಾಂಗ್ರೆಸ್ ಎಂದಿಗೂ ಎಸ್ಸಿ, ಎಸ್ಟಿ ಸಮುದಾಯದ ಬೆನ್ನೆಲುಬಾಗಿ ನಿಂತಿದೆ. ಹೀಗಾಗಿ ಈ ಸಮುದಾಯದವರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಬೇಕು’ ಎಂದು ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಆರ್.ಧರ್ಮಸೇನ ಮನವಿ ಮಾಡಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ವರ್ಗದವರ ಏಳಿಗೆಗೆ ಕಾಂಗ್ರೆಸ್ ಪಕ್ಷ ಏನು ಮಾಡಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಉಳುವವನೇ ಒಡೆಯ ನೀತಿ, ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಿರ್ಮಾಣ, ಶಿಶುವಿಹಾರ, ಗುತ್ತಿಗೆ ಟೆಂಡರ್ ಪದ್ಧತಿಯಲ್ಲಿ ಮೀಸಲಾತಿ ಮೊದಲಾದವುಗಳನ್ನು ಜಾರಿಗೆ ತಂದು ಅನುಕೂಲ ಕಲ್ಪಿಸಿದೆ’ ಎಂದು ತಿಳಿಸಿದರು.
‘ಈ ವರ್ಗದ ಜನಸಂಖ್ಯೆಗೆ ಅನುಗುಣವಾಗಿ ಕಾಂಗ್ರೆಸ್ ಸರ್ಕಾರ ಹಣ ಹಂಚಿಕೆ ಮಾಡಿದೆ. ಗ್ಯಾರಂಟಿ ಯೋಜನೆಯಿಂದಲೂ ಅನುಕೂಲವಾಗಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಬಡ ಕುಟುಂಬಗಳಿಗೆ ವಾರ್ಷಿಕ ₹1 ಲಕ್ಷ, ರೈತರ ಸಾಲಮನ್ನಾ ಮೊದಲಾದ ಯೋಜನೆಗಳು ಜಾರಿಯಾಗಲಿವೆ’ ಎಂದರು.
‘ಜೆಡಿಎಸ್, ಬಿಜೆಪಿ ಜನಸಾಮಾನ್ಯರ ಪಕ್ಷಗಳಲ್ಲ. ಅಧಿಕಾರಕ್ಕೆ ಬರಬೇಕೆಂಬ ಕಾರಣಕ್ಕಾಗಿ ಸಮಾಜದಲ್ಲಿ ಗೊಂದಲ ಸೃಷ್ಟಿಸುತ್ತಿವೆ’ ಎಂದು ಆರೋಪಿಸಿದರು.
ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ವೇಣುಗೋಪಾಲ್, ಮುಖಂಡರಾದ ವಿಜಯನಾಯ್ಕ, ಮೊಹ್ಸಿನ್ ಖಾನ್, ಕೆ.ರಮೇಶ್, ಸಿದ್ದಯ್ಯ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.