
ಸುತ್ತೂರು (ಮೈಸೂರು ಜಿಲ್ಲೆ): ಇಲ್ಲಿನ ವೀರಸಿಂಹಾಸನ ಮಹಾಸಂಸ್ಥಾನ ಮಠದಲ್ಲಿ ಜ.15ರಿಂದ 20ರವರೆಗೆ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.
‘ಪೀಠಾಧಿಪತಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಆರು ದಿನಗಳವರೆಗೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿವೆ. ಜಾತ್ರೆಯನ್ನು ಜನ ಜಾಗೃತಿಯ ಯಾತ್ರೆಯನ್ನಾಗಿ ಮಾಡಲು, ಸಮಾಜದ ಸರ್ವಾಂಗೀಣ ಪ್ರಗತಿಗೆ ಪೂರಕವಾಗಿ ರೂಪಿಸಲಾಗಿದೆ’ ಎಂದು ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಎಸ್.ಪಿ. ಮಂಜುನಾಥ್ ಇಲ್ಲಿ ಸೋಮವಾರ ತಿಳಿಸಿದರು.
‘ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸೇವಾ ಚಟುವಟಿಕೆಗಳನ್ನೂ ಹಮ್ಮಿಕೊಳ್ಳಲಾಗಿದೆ. 16ರಂದು ಸಾಮೂಹಿಕ ವಿವಾಹ, ಹಾಲರವಿ ಉತ್ಸವ, 17ರಂದು ರಥೋತ್ಸವ, ವೀರಭದ್ರೇಶ್ವರ ಕೊಂಡೋತ್ಸವ, 18ರಂದು ಮಹದೇಶ್ವರ ಕೊಂಡೋತ್ಸವ, ಲಕ್ಷ್ಮದೀಪೋತ್ಸವ, 19ರಂದು ತೆಪ್ಪೋತ್ಸವ, 20ರಂದು ಅನ್ನಬ್ರಹೋತ್ಸವ ನೆರವೇರಲಿದೆ. ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಕ್ರೀಡಾ ಚಟುವಟಿಕೆಗಳು ನಡೆಯಲಿವೆ. ವಸ್ತುಪ್ರದರ್ಶನ, ಕೃಷಿ ಮೇಳವನ್ನೂ ಆಯೋಜಿಸಲಾಗಿದೆ’ ಎಂದರು.
‘ರಂಗೋಲಿ, ಸೋಬಾನೆ ಪದಗಳು, ಭಜನೆ, ಚಿತ್ರಕಲೆ, ಗಾಳಿಪಟ, ರಸಪ್ರಶ್ನೆ ಸ್ಪರ್ಧೆಗಳು, ಕುಸ್ತಿ ಪಂದ್ಯಾವಳಿ, ದನಗಳ ಪರಿಷೆ, ಕಪಿಲಾರತಿ, ಸಾಂಸ್ಕೃತಿಕ ಮೇಳಕ್ಕೆ ವೇದಿಕೆ ಸಜ್ಜುಗೊಳಿಸಲಾಗುತ್ತಿದೆ. 25 ಲಕ್ಷ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ದಿನದ ಮೂರು ಹೊತ್ತಿನಲ್ಲೂ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.
‘18ರಂದು ಬೆಳಿಗ್ಗೆ 8.30ಕ್ಕೆ ‘ಕೃಷಿಯಲ್ಲಿ ಮಹಿಳೆ: ಸುಸ್ಥಿರ ಅಭಿವೃದ್ಧಿ ಮತ್ತು ಆಹಾರ ಭದ್ರತೆ’ ಕುರಿತ ವಿಚಾರಸಂಕಿರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.