ಪಿರಿಯಾಪಟ್ಟಣ: ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಹೆಗ್ಗಳಿಕೆಯ ‘ಬಲರಾಮ’ ಆನೆಗೆ ಗುರುವಾರ ರಾತ್ರಿ ಜಮೀನಿನ ಮಾಲೀಕ ಸುರೇಶ್ ಎಂಬಾತ ಗುಂಡು ಹಾರಿಸಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ತಾಲ್ಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಸಮೀಪವಿರುವ ಸರ್ವೆ ನಂ. 27ರ ಜಮೀನಿಗೆ ‘ಬಲರಾಮ’ ಬಂದಿದ್ದು, ಸಿಟ್ಟಿಗೆದ್ದ ಮಾಲೀಕ ಸುರೇಶ್ ಗುಂಡು ಹಾರಿಸಿದ್ದನು. ಆನೆಯ ತೊಡೆ ಬಳಿ ಗುಂಡು ಹೊಕ್ಕಿದ್ದು, ಚೇತರಿಸಿಕೊಳ್ಳುತ್ತಿದೆ.
‘ಕೃತ್ಯ ಎಸಗಿದ್ದ ಆರೋಪದ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಒಂಟಿ ನಳಿಕೆಯ ಕೋವಿ ಹಾಗೂ ಕಾಡತೂಸುಗಳನ್ನು ವಶಕ್ಕೆ ಪಡೆಯಲಾಗಿದೆ. ಬಲರಾಮನ ತೊಡೆ ಬಳಿ ಗುಂಡು ಹೊಕ್ಕಿದ್ದು, ಆನೆಗೆ ಯಾವುದೇ ಪ್ರಾಣಾಪಾಯ ಇಲ್ಲ’ ಎಂದು ಆರ್ಎಫ್ಒ ರತನ್ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.
ವಜ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.