ಮೈಸೂರು: ‘ಪೋಕ್ಸೊ ಪ್ರಕರಣದಲ್ಲಿ ಆರೋಪಿಯು ತಪ್ಪಿಸಿಕೊಳ್ಳಲಾಗುವುದಿಲ್ಲ’ ಎಂದು ಚಾಮರಾಜನಗರದ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.
ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿರುವ ಪ್ರಕರಣದ ಕುರಿತು ಮಾಧ್ಯಮದೊಂದಿಗೆ ಗುರುವಾರ ಮಾತನಾಡಿದ ಅವರು, ‘ದೂರು ದಾಖಲಾಗಿರುವುದರಿಂದ ತಪ್ಪಿಸಿಕೊಳ್ಳಲಾಗುವುದಿಲ್ಲ. ಒಂದಲ್ಲ, ಎರಡು ದಿನ ನಿಧಾನವಾಗಬಹುದು. ಆತುರ ಬೇಕಿಲ್ಲ. ಪ್ರಕರಣ ಮುಚ್ಚಿ ಹಾಕಲಾಗುವುದಿಲ್ಲ; ಅಂತಹ ಪ್ರಯತ್ನವೂ ನಡೆದಿಲ್ಲ ಎಂದು ಸರ್ಕಾರವೂ ಹೇಳಿದೆ. ತನಿಖೆ ನಡೆಯಲೇಬೇಕು. ಸಂತ್ರಸ್ತರಿಗೆ ನ್ಯಾಯ ಸಿಗಲೇಬೇಕು’ ಎಂದು ತಿಳಿಸಿದ್ದಾರೆ.
‘ಅದೊಂದು ಪ್ರಗತಿಪರ ಮಠ. ಬಹಳ ಗೌರವ ಇರುವಂಥದ್ದು. ಆ ಮಠದವರು, ಅನೇಕ ಖ್ಯಾತನಾಮರಿಗೆ ಪ್ರಶಸ್ತಿ ನೀಡಿದ್ದಾರೆ. ಆದರೆ, ಅಲ್ಲಿ ಈ ರೀತಿಯ ಘಟನೆಯಿಂದ ಎಲ್ಲರಿಗೂ ನೋವಾಗಿದೆ. ನಿಷ್ಪಕ್ಷಪಾತವಾಗಿ ತನಿಖೆ ಆಗಬೇಕು ಎನ್ನುವುದು ಎಲ್ಲರ ಒತ್ತಾಯವಾಗಿದೆ. ಅದು ಆಗುತ್ತದೆ ಎಂಬ ವಿಶ್ವಾಸವೂ ಇದೆ’ ಎಂದು ಪ್ರತಿಕ್ರಿಯಿಸಿದ್ದಾರೆ.
‘ಪ್ರಕರಣವನ್ನು ಮುಚ್ಚಿ ಹಾಕಬಾರದು. ಸೂಕ್ತ ತನಿಖೆ ನಡೆಯಬೇಕು. ಆಗಷ್ಟೆ ಸತ್ಯ ಹೊರ ಬರಲು ಸಾಧ್ಯ. ಯಾರ ಮೇಲೂ ಒತ್ತಡ ಹೇರುವ ಪ್ರಶ್ನೆಯೇ ಇಲ್ಲ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.