ಮೈಸೂರು: ಚಾಮರಾಜನಗರ ಪರಿಶಿಷ್ಟ ಜಾತಿ ಮೀಸಲು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಬಿಜೆಪಿ ಮುಖಂಡ ವಿ.ಶ್ರೀನಿವಾಸ ಪ್ರಸಾದ್ ಸೋಮವಾರ ಪ್ರಕಟಿಸಿದರು.
‘ಸಕ್ರಿಯ ರಾಜಕೀಯದಿಂದ ದೂರ ಸರಿಯುವ ನಿರ್ಧಾರ ಮಾಡಿದ್ದೆ. ಆದರೆ, ಕಾರ್ಯಕರ್ತರು, ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ. 5 ಬಾರಿ ಲೋಕಸಭಾ ಸದಸ್ಯನಾಗಿ, 2 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. 40 ವರ್ಷಗಳ ರಾಜಕೀಯ ಅನುಭವ ಇದೆ. ಹಾಗಾಗಿ, ಜನರು ಆಶೀರ್ವದಿಸುವ ವಿಶ್ವಾಸವಿದೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.
ದೇಶದಲ್ಲಿ ನರೇಂದ್ರ ಮೋದಿ ಅಲೆ ಇದೆ. ಕಾಂಗ್ರೆಸ್ಗೆ ಇದೇ ಮೊದಲ ಬಾರಿಗೆ ಇತರ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾದ ದಯನೀಯ ಪರಿಸ್ಥಿತಿ ಬಂದಿದೆ. ಕಳೆದ ಬಾರಿಗಿಂತಲೂ ಕಡಿಮೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದರು.
ತಕ್ಕ ಪಾಠ: ‘ನನ್ನನ್ನು ಸಚಿವ ಸ್ಥಾನದಿಂದ ತೆಗೆದುಹಾಕಿ ಅವಮಾನಿಸಿದ್ದಕ್ಕೆ ಈಗಾಗಲೇ ಸೇಡು ತೀರಿಸಿಕೊಂಡಾಗಿದೆ. ದುರಹಂಕಾರ ಮಾಡಿದವರಿಗೆ ನಮ್ಮ ಜನ ತಕ್ಕ ಪಾಠ ಕಲಿಸಿದ್ದಾರೆ. ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದವರು ಈಗ ಏನಾಗಿದ್ದಾರೆ’ ಎಂದು ಸಿದ್ದರಾಮಯ್ಯ ವಿರುದ್ಧ ಗುಡುಗಿದರು.
‘ಧ್ರುವನಾರಾಯಣ ನನ್ನ ಶಿಷ್ಯ. ಸ್ಥಳೀಯ ಜನರು, ಕಾರ್ಯಕರ್ತರು ನನ್ನನ್ನು ಪ್ರೀತಿಸುತ್ತಿದ್ದಾರೆ. ಲೋಕಸಭಾ ಚುನಾವಣೆಗೆ ನಿಂತು 20 ವರ್ಷಗಳಾಗಿವೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.