ಮೈಸೂರು: ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ಬಳಿಕ ಸೇಡಿನ ರಾಜಕಾರಣ ಮಾಡುತ್ತಿದ್ದು ಮೈತ್ರಿ ಅಭ್ಯರ್ಥಿಗಳನ್ನು ಸೋಲಿಸಲು ಪಣ ತೊಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಶ್ರೀರಾಮುಲು ಆರೋಪಿಸಿದರು.
ಸೋಲಿನ ಸೇಡು ತೀರಿಸಿಕೊಳ್ಳಲು ಸಿದ್ದರಾಮಯ್ಯ ಅವರಿಗೆ ಅವಕಾಶ ಸಿಕ್ಕಿದೆ. 'ಹಾವಿನ ದ್ವೇಷ ಹನ್ನೆರಡು ವರುಷ' ಎಂಬಂತೆ ಸೇಡು ತೀರಿಸಿಕೊಳ್ಳುವಲ್ಲಿ ಸಿದ್ದರಾಮಯ್ಯ ಅವರದು ಎತ್ತಿದ ಕೈ ಎಂದು ಅವರು ಭಾನುವಾರ ಸುದ್ದಿಗೋಷ್ಠಿಯಲ್ಲಿ ಕುಟುಕಿದರು.
ಮಂಡ್ಯ, ಹಾಸನ, ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಸೋಲಿಸಲು ಸಿದ್ದರಾಮಯ್ಯ ಪಿತೂರಿ ಹೂಡಿದ್ದಾರೆ. ಇದಕ್ಕಾಗಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ದೇವೇಗೌಡ ಕುಟುಂಬದ ವಿರುದ್ಧ ಕತ್ತಿ ಮಸೆದಿದ್ದಾರೆ. ಇದನ್ನು ಅರ್ಥಮಾಡಿಕೊಂಡೇ, ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿ ಸೋತರೆ ತಾವು ಹೊಣೆಯಲ್ಲ ಎಂದು ಸಚಿವ ಜಿ.ಟಿ.ದೇವೇಗೌಡ ಈಚೆಗೆ ಹೇಳಿಕೆ ನೀಡಿದ್ದಾರೆ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.