ಮೈಸೂರು: ಗಾಯಗೊಂಡಿದ್ದ ನಾಗರಹಾವಿಗೆ ಇಲ್ಲಿನ ಸರ್ಕಾರಿ ಪಶು ಆಸ್ಪತ್ರೆಯಲ್ಲಿ ವೈದ್ಯರು ಚಿಕಿತ್ಸೆ ನೀಡಿದ್ದಾರೆ.
ಇಲ್ಲಿನ ಲಲಿತಾದ್ರಿಪುರದ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ನಾಗರಹಾವಿನ ಹೆಡೆಯ ಭಾಗಕ್ಕೆ ಪೆಟ್ಟಾಗಿತ್ತು. ಹಾವನ್ನು ಹಿಡಿದ ಕೆಂಪರಾಜು ಎಂಬುವವರು ಇಲ್ಲಿನ ಧನ್ವಂತ್ರಿ ರಸ್ತೆಯಲ್ಲಿರುವ ಸರ್ಕಾರಿ ಪಶು ಆಸ್ಪತ್ರೆಗೆ ತಂದರು. ಅರಿವಳಿಕೆ ಚುಚ್ಚುಮದ್ದು ನೀಡಿದ ವೈದ್ಯರು ಚಿಕಿತ್ಸೆ ನೀಡಿದರು. ಹಾವು ಚೇತರಿಸಿಕೊಂಡ ಬಳಿಕ ಕೆಂಪರಾಜು ಹಾವನ್ನು ಕಾಡಿಗೆ ಬಿಟ್ಟಿದ್ದಾರೆ.
‘ವನ್ಯಜೀವಿಗಳನ್ನು ಅರಣ್ಯ ಇಲಾಖೆಯ ವೈದ್ಯರೇ ಚಿಕಿತ್ಸೆ ನೀಡಬೇಕು ಎಂದು ಕೆಲವು ಪರಿಸರವಾದಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ’ ಎಂದು ಹೆಸರು ಹೇಳಲಿಚ್ಛಿಸದ ಪಶು ವೈದ್ಯಾಧಿಕಾರಿಯೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ. ‘ಅರಣ್ಯ ಇಲಾಖೆಯ ವೈದ್ಯರ ಬಳಿಗೆ ಕಳುಹಿಸುವಷ್ಟರಲ್ಲಿ ಅದರ ಸ್ಥಿತಿ ಗಂಭೀರವಾಗುತ್ತಿತ್ತು. ಮಾನವೀಯ ದೃಷ್ಟಿಯಿಂದ ಹಾವಿಗೆ ಚಿಕಿತ್ಸೆ ನೀಡಲಾಗಿದೆ’ ಎಂದು ಅವರು ಸ್ಪಷ್ಟಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.