ADVERTISEMENT

ತಂಬಾಕು ಬೆಳೆ ಕುರಿತು ಚರ್ಚಿಸಲು ನಾಳೆಯೇ ಸಭೆ: ಎಸ್.ಟಿ.ಸೋಮಶೇಖರ್ ಭರವಸೆ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2020, 8:43 IST
Last Updated 14 ಏಪ್ರಿಲ್ 2020, 8:43 IST
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಡಾ.ಬಿ.ಆರ್‌.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಡಾ.ಬಿ.ಆರ್‌.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.    

ಮೈಸೂರು: ತಂಬಾಕು ಬೆಳೆಗಾರರ ಸಮಸ್ಯೆ ಚರ್ಚಿಸಲು ಏಪ್ರಿಲ್ 15ರಂದೇ ಮೈಸೂರಿನಲ್ಲಿ ಸಭೆ ನಡೆಸಲಾಗುವುದು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತಿಳಿಸಿದರು.

ಹುಣಸೂರಿನಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು ತಂಬಾಕು ಬೆಳೆಯುವ ರೈತರು, ಖರೀದಿದಾರರು, ಶಾಸಕರು, ಸಂಸದರ ಜೊತೆ ಮೈಸೂರಿನಲ್ಲಿ ಚರ್ಚಿಸಿ, ನಂತರ ಈ ಪ್ರದೇಶಗಳ ವ್ಯಾಪ್ತಿಯ 4 ಸಂಸದರು, 6 ಶಾಸಕರು ತಂಬಾಕು ಮಂಡಳಿ ಅಧಿಕಾರಿಗಳ ಸಭೆಯನ್ನು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಸಲು ಕ್ರಮವಹಿಸಲಾಗುವುದು. ಮುಖ್ಯಮಂತ್ರಿಗಳ ಸಭೆಯಲ್ಲಿ ಕೈಗೊಂಡ ನಿರ್ಧಾರದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದರು.

ರಾಜ್ಯದಲ್ಲಿ ಹೊಸದಾಗಿ ರೇಷನ್ ಕಾರ್ಡ್‌ಗೆ 2.5 ಲಕ್ಷ ಅರ್ಜಿಗಳು ಬಂದಿದ್ದು, ಅವರೆಲ್ಲರಿಗೂ ಸಹ ಪಡಿತರವಿತರಿಸಲು ನಿರ್ಧಾರ ಕೈಗೊಳ್ಳಲಾಗಿದ್ದು ಎರಡು ಮೂರು ದಿ‌ನದಲ್ಲಿ ಅನುಷ್ಠಾನ ಗೊಳಿಸಲಾಗುವುದು ಎಂದರು.

ADVERTISEMENT

ಯಾವುದೇ ಕಾರ್ಖಾನೆಯವರು ಕಾರ್ಮಿಕರ ವೇತನ ಕಡಿತ ಮಾಡುವಂತಿಲ್ಲ, ಹಾಗೂ ಕೆಲಸದಿಂದ ತೆಗೆಯುವಂತಿಲ್ಲ ಎಂದು ಆದೇಶಿಸಲಾಗಿದೆ ಎಂದು ತಿಳಿಸಿದರು.

ಲಾಕ್‌ಡೌನ್ ಅವಧಿ ಮೇ 3ರವರೆಗೆ ವಿಸ್ತರಿಸಲಾಗಿದೆ. ಈ ವರೆಗೂ ಲಾಕ್‌ಡೌನ್ ಆದೇಶವನ್ನು ಜಿಲ್ಲಾಡಳಿತ ಅಚ್ಚುಕಟ್ಟಾಗಿ ನಿರ್ವಹಿಸಿದೆ, ಜನರೂ ಸಹಕಾರ ನೀಡಿದ್ದಾರೆ. ಮುಂದಿನ ದಿನಗಳಲ್ಲೂ ಬಿಗಿಯಾಗಿ ಲಾಕ್‌ಡೌನ್ ಜಾರಿಗೊಳಿಸಲಾಗುವುದು ಎಂದರು.

ಮಾವಿನ ಬೆಳೆ ಬರುತ್ತಿದೆ. ಮಾವಿನಹಣ್ಣು ರಾಜ್ಯ ಒಳಗೆ ಹಾಗೂ ಹೊರಗೆ ಸಾಗಣೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ವರ್ತಕರ ಸಭೆ ಕರೆದು ಎರಡು ಮೂರು ದಿನದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಕೋವಿಡ್-19ಗೆ‌ ಸಂಬಂಧಿಸಿದಂತೆ ಅಧಿಕಾರಿಗಳು ಅಚ್ಚುಕಟ್ಟಾಗಿ ಕ್ರಮಹಿಸಿದ್ದಾರೆ. ಪಡಿತರ ವಿತರಣೆಗೆ ಸಂಬಂಧಿಸಿದ ಸಣ್ಣ ಪುಟ್ಟ ಸಮಸ್ಯೆ ನಿವಾರಿಸಿ, ಪ್ರತಿ ಕುಟುಂಬಕ್ಕೂ ಸಿಗುವಂತೆ‌ ಕ್ರಮವಹಿಸಲಾಗಿದೆ ಎಂದು ಹೇಳಿದರು.

ಸಣ್ಣ ಪುಟ್ಟ ಕಾಯಿಲೆಗೆ ಚಿಕಿತ್ಸೆ ನೀಡಲು ಅನುವಾಗುವಂತೆ ಖಾಸಗಿ ಕ್ಲಿನಿಕ್‌ಗಳನ್ನು ತೆರೆಯುವಂತೆ ಈಗಾಗಲೇ ಜಿಲ್ಲಾಧಿಕಾರಿಗಳು ಖಾಸಗಿ ವೈದ್ಯರಿಗೆ ಸೂಚನೆ ನೀಡಿದ್ದಾರೆ ಎಂದರು.

ಕುಡಿಯುವ ನೀರಿನ ಸಮಸ್ಯೆಗಳ ನಿವಾರಣೆಗೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಯಾವುದೇ ಸಮಸ್ಯೆಯಾಗದಂತೆ ಎಚ್ಚರವಹಿಸಲಾಗುವುದು ಎಂದರು.

ಸಭೆಯಲ್ಲಿ ಶಾಸಕ ಎಚ್.ಪಿ.ಮಂಜುನಾಥ್, ಮಾಜಿ ಸಚಿವರಾದ ಎಚ್. ವಿಶ್ವನಾಥ್, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ , ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯಿತಿ ಸಿ.ಇ.ಒ. ಪ್ರಶಾಂತ್ ಕುಮಾರ್ ಮಿಶ್ರ, ಉಪವಿಭಾಗಾಧಿಕಾರಿ ವೀಣಾ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.