ಬಸವ ಜಯ ಮೃತ್ಯುಂಜಯ ಸ್ವಾಮೀಜಿ
ಮೈಸೂರು: ‘ಪಂಚಮಸಾಲಿಗಳಿಗೆ 2ಎ ಮೀಸಲಾತಿ ನೀಡುವ ಕುರಿತು ಸರ್ಕಾರ ನಮ್ಮಜೊತೆ ಚರ್ಚಿಸದಿದ್ದರೆ ಚಳಿಗಾಲದ ಅಧಿವೇಶನದ ವೇಳೆ ಹೋರಾಟ ನಡೆಸಲಾಗುವುದು’ ಎಂದು ಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದರು.
‘ಮೂರುವರೆ ವರ್ಷದಿಂದ ನಿರಂತರ ಹೋರಾಟ ನಡೆಸಿದರೂ ಸ್ಪಂದನವಿಲ್ಲ. ಬಿಜೆಪಿ ಅವಧಿಯಲ್ಲಿ ‘2ಡಿ’ ಮೀಸಲಾತಿ ನೀಡಿದ್ದರೂ ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ. 12 ಜಿಲ್ಲೆಗಳ ಹೆದ್ದಾರಿಯಲ್ಲಿ ಲಿಂಗಪೂಜೆಯ ಮೂಲಕ ಪ್ರತಿಭಟಿಸಿದರೂ ಕಾಂಗ್ರೆಸ್ ಸರ್ಕಾರ ಬೇಡಿಕೆಗೆ ಸ್ಪಂದಿಸಿಲ್ಲ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.
‘ಸದನದಲ್ಲಿ ಧ್ವನಿ ಎತ್ತದ ಸಮುದಾಯದ ಶಾಸಕರು, ಚರ್ಚೆಗೆ ಸ್ಪೀಕರ್ ಅವಕಾಶ ನೀಡಿಲ್ಲ ಎನ್ನುತ್ತಾರೆ. ಅವರು ಮುಖ್ಯಮಂತ್ರಿ ಮೇಲೆ ಒತ್ತಡ ಹಾಕಬೇಕಿತ್ತು’ ಎಂದು ಪ್ರತಿಪಾದಿಸಿದರು.
‘2ಎ ಮೀಸಲಾತಿಗೆ ಒತ್ತಾಯಿಸಿ ಸೆ.22ರಂದು ಬೆಳಗಾವಿಯಲ್ಲಿ ವಕೀಲರ ಪ್ರಥಮ ರಾಜ್ಯ ಸಮಾವೇಶ ಏರ್ಪಡಿಸಿದೆ. ಕಾನೂನು ಹೋರಾಟ ರೂಪಿಸಲು 10 ಹಿರಿಯ ವಕೀಲರ ಸಮಿತಿ ರಚಿಸಲಾಗುವುದು. ಸಮಾವೇಶಕ್ಕೂ ಮುನ್ನ ಸೆ.17ರಂದು ಕಲಬುರಗಿಯಲ್ಲಿ ಸಮುದಾಯದ ಮುಖಂಡರು ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಿದ್ದಾರೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.