ನಗರದ ಕೃಷಿ ಇಲಾಖೆಯ ಆವರಣದಲ್ಲಿ ಸೋಮವಾರ ರೈತರಿಗೆ ಸಹಾಯಧನ ಬಿತ್ತನೆ ಬೀಜ ವಿತರಿಸಿ ಅವರು ಮಾತನಾಡಿದರು.
ನಂಜನಗೂಡು: ಕೃಷಿ ಇಲಾಖೆಯಿಂದ ರೈತರಿಗೆ ಸಬ್ಸಿಡಿ ದರದಲ್ಲಿ ಭತ್ತದ ಬಿತ್ತನೆ ಬೀಜ ವಿತರಿಸಲಾಗುತ್ತಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಜೊತೆಗೆ ಭತ್ತದ ಬೆಳೆಯ ಸುಧಾರಿತ ಬೇಸಾಯ ಕ್ರಮಗಳನ್ನು ಅನುಸರಿಸಿ ಬಿತ್ತನೆ ಮಾಡಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.
ಜ್ಯೋತಿ, ಐ.ಆರ್ 64, ಎಂಟಿಯು 1001, ಎಂಟಿಯು 1010, ಆರ್ಎನ್ಆರ್ 15048, ಸ್ಥಳೀಯ ಭತ್ತದ ಬಿತ್ತನೆ ಬೀಜಗಳನ್ನು ತಾಲೂಕಿನ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ವಿತರಿಸಲಾಗುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡ ವರ್ಗದ ರೈತರಿಗೆ 300, ಸಾಮಾನ್ಯ ವರ್ಗದ ರೈತರಿಗೆ ₹200 ಸಹಾಯಧನದಲ್ಲಿ ಬಿತ್ತನೆ ಬೀಜ ವಿತರಿಸಲಾಗುತ್ತಿದೆ. ರೈತರು ಇದರ ಸದುಪಯೋಗ ಪಡೆದುಕೊಂಡು ಕೃಷಿ ಚಟುವಟಿಕೆಯಲ್ಲಿ ತೊಡಗಬೇಕು. ಬಿತ್ತನೆ ಬೀಜಕ್ಕೆ ಕೊರತೆಯಾಗದಂತೆ ಕ್ರಮ ವಹಿಸುವಂತೆ ಕೃಷಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕ ರವಿ ಮಾತನಾಡಿ, ರೈತರು ಭತ್ತದ ಬಿತ್ತನೆ ಸಮಯದಲ್ಲಿ ಅತಿಯಾಗಿ ಯೂರಿಯ ಬಳಸುತ್ತಿದ್ದಾರೆ. ಇದರಿಂದ ಮಣ್ಣಿನ ಫಲವತ್ತತೆ ನಾಶವಾಗುತ್ತದೆ. ಸಸ್ಯಗಳ ಬೆಳವಣಿಗೆ ಮಾತ್ರ ಹೆಚ್ಚಾಗಿ ಕಾಯಿ ಕಟ್ಟುವ ಪ್ರಮಾಣ ಕಡಿಮೆಯಾಗುತ್ತದೆ. ಇಳುವರಿಯಲ್ಲಿ ನಷ್ಟವಾಗಿ, ರೋಗಗಳ ಬಾಧೆ ಹೆಚ್ಚಾಗುತ್ತದೆ. ಆದ್ದರಿಂದ ಕಾರ್ಬೊಡೈಸಂ ಉಪಯೋಗಿಸಿ ಬೀಜೋಪಚಾರ ಮಾಡುವ ಮೂಲಕ, ಪೊಟ್ಯಾಷ್ ಗೊಬ್ಬರ ಬಳಕೆ ಮಾಡುವ ಮೂಲಕ ಹೆಚ್ಚಿನ ಇಳುವರಿ ಪಡೆಯಬಹುದು. ಮಾಹಿತಿಗಾಗಿ ಕೃಷಿ ಸಂಪರ್ಕ ಕೇಂದ್ರದ ಅಧಿಕಾರಿ ಸಂಪರ್ಕಿಸುವಂತೆ ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.