ಮೈಸೂರು: ‘ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ಇಟ್ಟುಕೊಂಡು ಅದನ್ನು ತಲುಪಲು ಶ್ರಮಿಸಬೇಕು’ ಎಂದುಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿ.ಆರ್.ಮಹೇಶ್ ಸಲಹೆ ನೀಡಿದರು.
ಇಲ್ಲಿನ ಕುವೆಂಪು ನಗರದಲ್ಲಿರುವ ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿನಿಲಯದಲ್ಲಿ ನಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಉತ್ತಮ ಪ್ರಜೆಗಳಾಗಿ, ಸರ್ಕಾರದ ಉನ್ನತ ಹುದ್ದೆಗಳನ್ನು ಅಲಂಕರಿಸಿ ದೇಶ ಸೇವೆ ಮಾಡಬೇಕು’ ಎಂದರು.
‘ವಿದ್ಯಾರ್ಥಿನಿಲಯದಲ್ಲಿ ಎಲ್ಲ ರೀತಿಯವರೂ ಇರುತ್ತಾರೆ. ಆದರೆ, ತಪ್ಪನ್ನು ತಿದ್ದುವ ಒಳ್ಳೆಯ ಸ್ನೇಹಿತರನ್ನು ಆಯ್ಕೆ ಮಾಡಿಕೊಳ್ಳಬೇಕು. ಉತ್ತಮ ದಾರಿಯಲ್ಲಿ ಸಾಗಬೇಕು. ಗುರಿ ತಲುಪಲು ಎದುರಾಗುವ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಬೇಕು’ ಎಂದು ತಿಳಿಸಿದರು.
ವಿವಿಧ ಸ್ಪರ್ಧೆಗಳಲ್ಲಿ ಜಯ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ನಿಲಯಪಾಲಕರಾದ ಜಗದೀಶ್ ಕೋರಿ, ಪರಶುರಾಂ, ಚಿಕ್ಕವಡ್ಗಲ್ ಮಂಜುಳ, ಭಾಗ್ಯಲಕ್ಷ್ಮಿ, ಮಹಾಲಕ್ಷ್ಮಿ, ಅನುಪಮಾ, ರಮ್ಯಾ, ಮೀನಾ, ರೇಖಾ, ಯೋಗೀಶ್, ಅಭಿಷೇಕ್, ರಿಷಿ, ಪ್ರಜ್ವಲ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.