ತಲಕಾಡು: ‘ಪೊಲೀಸ್ ಠಾಣೆ ವ್ಯಾಪ್ತಿಗೆ ಆರು ಗ್ರಾಮ ಪಂಚಾಯಿತಿ ಬರುವುದರಿಂದ ಪ್ರತಿ ತಿಂಗಳು ಒಂದೊಂದು ಕಡೆ ಸಭೆ ನಡೆಸಲಾಗುವುದು’ ಎಂದು ಸರ್ಕಲ್ ಇನ್ಸ್ಪೆಕ್ಟರ್ ಆನಂದ್ ಕುಮಾರ್ ಹೇಳಿದರು.
ಇಲ್ಲಿನ ಪೊಲೀಸ್ ಠಾಣೆಯಲ್ಲಿ ಭಾನುವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಂದುಕೊರತೆ ಸಭೆಯ ನೇತೃತ್ವ ವಹಿಸಿ ಮಾತನಾಡಿದರು.
‘ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಂದ ಬರಲು ಅನುಕೂಲವಾಗುವ ರೀತಿಯಲ್ಲಿ ಸಭೆ ನಡೆಸಲಾಗುವುದು. ಇದರಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಹತ್ತಿರದ ಪೊಲೀಸ್ ಠಾಣೆಗಳಿಗೆ ಬಂದು ಸಮಸ್ಯೆ ನಿವಾರಿಸಿಕೊಳ್ಳಲು ಅನುಕೂಲವಾಗುತ್ತದೆ. ಜೊತೆಗೆ ಸಭೆಯಲ್ಲಿ ಚರ್ಚೆಯಾದ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.
ಪಿಎಸ್ಐ ತಿರುಮಲ್ಲೇಶ್ ಮಾತನಾಡಿ, ‘ಪ್ರತಿಯೊಬ್ಬರೂ ಕಡ್ಡಾಯವಾಗಿ ಹೆಲ್ಮೆಟ್ ಬಳಸುವ ಬಗ್ಗೆ ಸ್ವಯಂ ಪ್ರೇರಿತರಾಗಿ ಜಾಗೃತಿ ಮೂಡಿಸಬೇಕು. ಗ್ರಾಮಕ್ಕೆ ಬರುವ ಅಪರಿಚಿತರ ಚಲನವಲನದ ಮೇಲೆ ತೀವ್ರ ನಿಗಾ ಇರಿಸಿ ಠಾಣೆಗೆ ಮಾಹಿತಿ ನೀಡಿದರೆ ಕಳ್ಳತನ ಸೇರಿದಂತೆ ಮುಂತಾದ ಅಪರಾಧ ಚಟುವಟಿಕೆಗಳನ್ನು ತಡೆಯಲು ಸಾಧ್ಯ’ ಎಂದರು.
ಸಭೆಯಲ್ಲಿ ಸಮುದಾಯದ ಮುಖಂಡರಾದ ತಲಕಾಡು ಕಾಡಿ ಮಹದೇವ್, ಕಸಾಪ ವೆಂಕಟೇಶ್, ಮೋಹನ್ ನಾಯಕ, ಮನೋಜ್, ಬೆಟ್ಟಳ್ಳಿ ಶಾಂತರಾಜು, ಗಂಗಾಧರ್, ನಂಜುಂಡಸ್ವಾಮಿ, ಕುಕ್ಕೂರು ತ್ಯಾಗರಾಜ್ ಒಡೆಯಂಡಹಳ್ಳಿ ಗಣೇಶ್, ಮನು, ಎಎಸ್ಐ ಸುರೇಶ್, ಸಿದ್ದರಾಜು, ಮಂಜುನಾಥ್, ಶಶಿಕುಮಾರ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.