ಸಚಿವ ಭೈರತಿ ಸುರೇಶ್
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಕ್ಲೀನ್ಚಿಟ್ ನೀಡಿ ಸಲ್ಲಿಸಿರುವ ವರದಿಯನ್ನು ಟೀಕಿಸುತ್ತಿರುವ ಹಾಗೂ ಆಕ್ಷೇಪ ವ್ಯಕ್ತಪಡಿಸುತ್ತಿರುವ ಬಿಜೆಪಿಯವರಿಗೆ ಮಾನ-ಮರ್ಯಾದೆ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್. ಸುರೇಶ್ ಟೀಕಿಸಿದರು.
ಇಲ್ಲಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿದ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ಮಾನ- ಮರ್ಯಾದೆ ಇಲ್ಲದವರು ಮಾತ್ರ ಲೋಕಾಯುಕ್ತ ವರದಿ ಟೀಕಿಸಬೇಕು ಎಂದರು.
ನಾವು ಯಾವ ತಪ್ಪನ್ನೂ ಮಾಡಿಲ್ಲ. ಚಾಮುಂಡೇಶ್ವರಿ ಬಳಿ ಪ್ರಮಾಣ ಮಾಡೋಣ ಬನ್ನಿ ಎಂದು ಆಹ್ವಾನಿಸಿದ್ದೆ. ಆದರೆ, ಯಾರೂ ಆಣೆ-ಪ್ರಮಾಣಕ್ಕೆ ಬರಲಿಲ್ಲ. ಈಗ ಲೋಕಾಯುಕ್ತ ವರದಿ ಬಂದಿದೆ. ರಾಜ್ಯದ ಜನರಿಗೆ ಈಗ ಸತ್ಯ ಗೊತ್ತಾಗಿದೆ. ಸಿದ್ದರಾಮಯ್ಯ ಯಾವತ್ತೂ ಅಕ್ರಮ ಅಥವಾ ತಪ್ಪು ಮಾಡಿಲ್ಲ. ಬಿಜೆಪಿಯವರು ಸುಳ್ಳು ಹೇಳಿಕೊಂಡು ಮೈಸೂರು ಚಲೋ ಪಾದಯಾತ್ರೆ ಮಾಡಿದರು ಎಂದರು.
ಮುಡಾದಲ್ಲಿ ಅಕ್ರಮ ಮಾಡಿದ ಒಬ್ಬರನ್ನೂ ಬಿಡುವ ಪ್ರಶ್ನೆಯೇ ಇಲ್ಲ,,,
50:50 ಅನುಪಾತದಲ್ಲಿ ನಿವೇಶನ ಹಂಚಿಕೆಯಲ್ಲಿ ಆಗಿರುವ ಅಕ್ರಮದ ಬಗ್ಗೆ ಪಿ.ಎನ್. ದೇಸಾಯಿ ಆಯೋಗ ತನಿಖೆ ನಡೆಸುತ್ತಿದೆ. ತನಿಖೆ ಮುಗಿದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
50: 50 ಅನುಪಾತದಲ್ಲಿ ಪರಿಹಾರ ನೀಡುವ ಕಾನೂನು ಮುಡಾದಲ್ಲಿದೆ. ಅದರ ಅನ್ವಯ ಪರಿಹಾರ ನೀಡಲಾಗಿದೆ. ಆ ಕಾನೂನು ಇಲ್ಲದೇ ಪರಿಹಾರವನ್ನು ಹೇಗೆ ಕೊಡುವುದು? ಬಿಜೆಪಿಯವರ ಕಾಲದಲ್ಲೇ ಪರಿಹಾರವನ್ನು ಹೆಚ್ಚು ನೀಡಲಾಗಿದೆ.ಪಾರ್ವತಮ್ಮ ಅವರಿಗೂ ಬಿಜೆಪಿಯ ಬಸವರಾಜ ಬೊಮ್ಮಾಯಿ ಅವರೇ ಪರಿಹಾರ ನೀಡಿದ್ದರು ಎಂದರು.
ಮುಖ್ಯಮಂತ್ರಿ, ಮಂತ್ರಿಗಳು ತಪ್ಪು ಮಾಡಿದಾಗ ಲೋಕಾಯುಕ್ತದವರು ಜೈಲಿಗೆ ಕಳುಹಿಸಿದ ಉದಾಹರಣೆ ಇದೆ. ಈಗ ಪೂರ್ವಾಗ್ರಹಪೀಡಿತರಾಗಿ ತನಿಖೆ ನಡೆಸಿಲ್ಲ. ವಾಸ್ತವ ಸ್ಥಿತಿಯನ್ನು ತನಿಖೆ ಮಾಡಿ ವರದಿ ನೀಡಿದ್ದಾರೆ ಎಂದರು.
ಮುಡಾ ದಾಖಲೆಗಳನ್ನು ತೆಗೆದುಕೊಂಡು ಹೋಗಲು ಅದೇನು ಕಡ್ಲೆಪುರಿಯಲ್ಲ. ದಾಖಲೆಗಳು ಕಾಣೆಯಾಗಿವೆ ಎಂದು ಯಾವ ವರದಿಯಲ್ಲಿ ಹೇಳಲಾಗಿದೆ? ದಾಖಲೆಗಳನ್ನು ಎತ್ತಿಕೊಂಡು ಹೋಗುವುದು ಅಷ್ಟೊಂದು ಸುಲಭವೇ? ಕ್ಯಾಮೆರಾ ಸೇರಿ ಎಲ್ಲರ ಮುಂದೆ ಹೇಗೆ ತೆಗೆದುಕೊಂಡು ಹೋಗಲು ಸಾಧ್ಯ ? ಅದರಲ್ಲೂ 141 ದಾಖಲೆ ಒಯ್ದಿದ್ದಾರೆ ಎಂದು ಕೆಲವರು ಹೇಳಿದ್ದಾರೆ. ಅವರಿಗೆ ಆ ನಂಬರ್ ನೀಡಿದವರು ಯಾರು? ಬಹುಶಃ ಈ ಆರೋಪ ಮಾಡಿದವರೇ ತೆಗೆದುಕೊಂಡು ಹೋಗಿರಬೇಕು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.