ಪಿರಿಯಾಪಟ್ಟಣ: ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಏಳು ವರ್ಷಗಳಿಂದ ಯಾವುದೇ ಜನಪರ ಕಾರ್ಯಕ್ರಮ ಗಳನ್ನು ನೀಡಿಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ದೂರಿದರು.
ಇಲ್ಲಿನ ಆದಿಚುಂಚನಗಿರಿ ಸಮು ದಾಯ ಭವನದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
‘ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿತ್ತು. ಆದರೆ, ಬಿಜೆಪಿ ಸರ್ಕಾರದಿಂದ ಒಂದೂ ಉತ್ತಮ ಯೋಜನೆ ಜಾರಿಗೆ ತರಲು ಸಾಧ್ಯವಾಗಿಲ್ಲ. ಅಂತರರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಕಡಿಮೆಯಾಗಿದ್ದರೂ ನಮ್ಮಲ್ಲಿ ಮಾತ್ರ ನೂರರ ಗಡಿ ದಾಟಿ ಮುನ್ನುಗ್ಗುತ್ತಿದೆ’ ಎಂದು ಟೀಕಿಸಿದರು.
‘ಕಾಂಗ್ರೆಸ್ ಸರ್ಕಾರವಿದ್ದಾಗ ₹ 450ಕ್ಕೆ ಅಡುಗೆ ಅನಿಲ ಸಿಲಿಂಡರ್ ಸಿಗುತ್ತಿತ್ತು, ಆದರೆ, ಇಂದು ಅದೇ ಸಿಲಿಂಡರ್ ಬೆಲೆ ₹850 ದಾಟಿ ಹೋಗಿದೆ. ಇದನ್ನು ‘ಅಚ್ಛೇ ದಿನ್’ ಎಂದು ಕರೆಯಬೇಕಾ’ ಎಂದು ಪ್ರಶ್ನಿಸಿದರು.
‘ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕೊರೊನಾವನ್ನು ಸಮರ್ಪಕವಾಗಿ ನಿಯಂತ್ರಣ ಮಾಡುವಲ್ಲೂ ಎಡವಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಶಾಸಕ ಕೆ.ವೆಂಕಟೇಶ್ ಮಾತನಾಡಿ, ‘ಬಿಜೆಪಿ ಸರ್ಕಾರ ಜನಸಾಮಾನ್ಯರಿಗೆ ಹೊರೆಯಾಗಿದೆ. ಅವರಿಗೆ ಸಾಮಾನ್ಯರ ಬಗ್ಗೆ ಯಾವುದೇ ಕಾಳಜಿ ಇಲ್ಲ’ ಎಂದು ದೂರಿದರು.
‘ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದೆ. ನಮ್ಮ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ರಾಜ್ಯದಲ್ಲಿ ಭ್ರಷ್ಟ ಮುಖ್ಯಮಂತ್ರಿ ಬದಲಾದರೆ ಏನೂ ಪ್ರಯೋಜನ ಆಗುವುದಿಲ್ಲ. ಭ್ರಷ್ಟ ಸರ್ಕಾರ ಬದಲಾಗಬೇಕಿದೆ’ ಎಂದು ಅಭಿಪ್ರಾಯಪಟ್ಟರು.
ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಡಾ. ಬಿ.ಜೆ. ವಿಜಯಕುಮಾರ್, ವೀಕ್ಷಕ ಮಂಜುನಾಥ್ ಗುಂಡೂರಾವ್, ಮುಖಂಡರಾದ ಎಚ್.ಡಿ.ಗಣೇಶ್, ಬಿ.ಎಸ್ ರಾಮಚಂದ್ರ ಮಾತನಾಡಿದರು.
ತೈಲ ಬೆಲೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಿರಿಯಾಪಟ್ಟಣ ಮತ್ತು ಬೆಟ್ಟದಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟ್ಟಣದಲ್ಲಿ ಸೈಕಲ್ ಜಾಥಾ ನಡೆಸಲಾಯಿತು. ಮುಖಂಡರು ಎತ್ತಿನಗಾಡಿ ಓಡಿಸಿ ಗಮನಸೆಳೆದರು.
ಸಭೆಯಲ್ಲಿ ಪಿರಿಯಾಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮತ್ ಜಾನ್ ಬಾಬು,ಬೆಟ್ಟದಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ.ಸ್ವಾಮಿ, ಮಹಿಳಾ ಘಟಕದ ಅಧ್ಯಕ್ಷರಾದ ಮುತ್ತುರಾಣಿ ಮತ್ತು ಸರಸ್ವತಿ, ಮುಖಂಡರಾದ ಕೆ.ಹೊಲದಪ್ಪ, ಪಿ.ಮಹದೇವ್ ಎಸ್.ಟಿ. ಲಕ್ಷ್ಮೇಗೌಡ, ನಿತಿನ್ ವೆಂಕಟೇಶ್, ಕೆ.ಸಿ.ಕೃಷ್ಣಪ್ಪ, ಪುಟ್ಟಯ್ಯ, ಮಾನ್ಸೂನ್ ಚಂದ್ರು, ವಿಜಯಕುಮಾರ್, ನವಿಲೂರು ಮಹದೇವ್, ಸುರೇಶ್ ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.