ADVERTISEMENT

ಮೈಸೂರು: ಅದ್ಧೂರಿ ವಿದ್ಯುತ್ ದೀಪಾಲಂಕಾರ ಬೇಕಿರಲಿಲ್ಲ– ಎಂ.ಕೆ.ಸೋಮಶೇಖರ್

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2021, 14:58 IST
Last Updated 10 ಅಕ್ಟೋಬರ್ 2021, 14:58 IST
ಎಂ.ಕೆ.ಸೋಮಶೇಖರ್
ಎಂ.ಕೆ.ಸೋಮಶೇಖರ್   

ಮೈಸೂರು: ‘ಸರಳ ದಸರಾ ಆಚರಿಸುತ್ತಿರುವುದರಿಂದ ಅದ್ಧೂರಿ ವಿದ್ಯುತ್‌ ದೀಪಾಲಂಕಾರ ಮಾಡುವ ಅಗತ್ಯ ಇರಲಿಲ್ಲ’ ಎಂದು ಕಾಂಗ್ರೆಸ್‌ ಮುಖಂಡ ಎಂ.ಕೆ.ಸೋಮಶೇಖರ್ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿದ್ಯುತ್‌ ದೀಪಾಲಂಕಾರವನ್ನು ವೀಕ್ಷಿಸಲು ಸಾವಿರಾರು ಮಂದಿ ನಗರಕ್ಕೆ ಬರುತ್ತಿದ್ದಾರೆ. ಸಂಜೆ ಬಳಿಕ ವಾಹನ ದಟ್ಟಣೆ ಉಂಟಾಗುತ್ತಿದ್ದು, ಜನಜಂಗುಳಿ ಹೆಚ್ಚುತ್ತಿದೆ. ಇದರಿಂದ ಕೋವಿಡ್‌ ಮೂರನೇ ಅಲೆ ಬರುವ ಸಾಧ್ಯತೆ ಇದೆ’ ಎಂದು ಆತಂಕ ವ್ಯಕ್ತಪಡಿಸಿದರು.

‘ಈ ಬಾರಿಯ ದಸರಾ ಮಹೋತ್ಸವವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಹೊಗಳಿಕೆಗಾಗಿ ಆಚರಿಸಲಾಗುತ್ತಿದೆ. ಉದ್ಘಾಟನಾ ಸಮಾರಂಭದಲ್ಲೂ ಪ್ರಧಾನಿಯನ್ನು ಹಾಡಿ ಹೊಗಳಲಾಗಿದೆ. ಕೆ.ಆರ್.ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಮತ್ತು ಶಾಸಕ ಎಸ್‌.ಎ.ರಾಮದಾಸ್ ಮಾದರಿಯಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಮೋದಿ ಯುಗ ಉತ್ಸವ ಹೆಸರಿನಲ್ಲಿ ವಿದ್ಯಾರಣ್ಯಪುರಂನ ಉದ್ಯಾನವನ್ನು ಹಾಳು ಮಾಡಲಾಗಿದೆ’ ಎಂದು ಆರೋಪಿಸಿದರು.

ADVERTISEMENT

‘ದೇಶದಲ್ಲಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಇದರಿಂದ ಜನಸಾಮಾನ್ಯರು ನೆಮ್ಮದಿಯಾಗಿ ಜೀವನ ನಡೆಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಜನರ ಸಂಕಷ್ಟಗಳಿಗೆ ಕೇಂದ್ರ ಸರ್ಕಾರವೇ ಹೊಣೆ’ ಎಂದು ದೂರಿದರು.

* ನಾನು ಶಾಸಕನಾಗಿದ್ದ ಅವಧಿಯಲ್ಲಿ ಅನುಷ್ಠಾನಕ್ಕೆ ತಂದಿದ್ದ ಯೋಜನೆಗಳನ್ನು ಶಾಸಕ ರಾಮದಾಸ್ ಅವರು ತಮ್ಮದೆಂದು ಬಿಂಬಿಸಿಕೊಳ್ಳುತ್ತಿದ್ದಾರೆ.

-ಎಂ.ಕೆ.ಸೋಮಶೇಖರ್‌, ಕಾಂಗ್ರೆಸ್‌ ಮುಖಂಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.