
ಎಚ್.ಡಿ.ಕೋಟೆ: ತಾಲ್ಲೂಕಿನ ಗಣೇಶನಗುಡಿ ಸಮೀಪದ ತಾರಕ ನಾಲೆ ಬಳಿಯ ಇಟ್ಟಿಗೆ ಕಾರ್ಖಾನೆ ಬಳಿ ಹಾಗೂ ನಿವೃತ್ತ ಶಿಕ್ಷಕ ಚಿಕ್ಕಣ್ಣಯ್ಯ ಅವರ ಮನೆ ಹಿಂಭಾಗದ ಜಮೀನಿನಲ್ಲಿ ಸೋಮವಾರ ಹುಲಿ ಪ್ರತ್ಯಕ್ಷಗೊಂಡು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರೊಬ್ಬರು ಜಮೀನಿನಲ್ಲಿ ಕಾಣಿಸಿಕೊಂಡ ಹುಲಿಯ ಚಿತ್ರವನ್ನು ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ತಕ್ಷಣ ಅಕ್ಕಪಕ್ಕದ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಸ್ಥಳಕ್ಕೆ ಆಗಮಿಸಿದ ಅರಣ್ಯ ಅಧಿಕಾರಿಗಳು, ಡ್ರೋನ್ ಕ್ಯಾಮೆರಾ ಮೂಲಕ ಹುಲಿ ಪತ್ತೆಗೆ ಸತತ ಪ್ರಯತ್ನ ನಡೆಸಿದರು. ಹೆಜ್ಜೆ ಗುರುತಿನ ಜಾಡು ಹಿಡಿದು ಕಬಿನಿ ಹಿನ್ನೀರಿನ ಕಡೆ ಹುಲಿ ತೆರಳಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಬೀಚನಹಳ್ಳಿ, ಗಣೇಶನ ಗುಡಿ, ನೇರಳೆ, ನೇರಳೆಹೊಸೂರು, ಎಲಮತ್ತೂರು ಸುತ್ತಮುತ್ತಲಿನ ಗ್ರಾಮಸ್ಥರು ಜಾಗೃತರಾಗಿರಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.